ಬೆಂಗಳೂರು : ಅಂತರರಾಜ್ಯ ಜಲ ವಿವಾದಗಳ ಕುರಿತು ನವದೆಹಲಿಯಲ್ಲಿ ಕಾನೂನು ತಜ್ಞರ ಜತೆ ಶೀಘ್ರದಲ್ಲೇ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಇಂದು ತಿಳಿಸಿದರು. ಬೆಂಗಳೂರಿನ ತಮ್ಮ ನಿವಾಸದ ಬಳಿ ಸೇರಿದ್ದ ಮಾಧ್ಯಮದವರಿಗೆ ಈ ವಿಷಯ ತಿಳಿಸಿದರು.
ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್, ರಾಜ್ಯದ ಹಿರಿಯ ವಕೀಲರು, ಕಾನೂನು ತಜ್ಞರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ನೀರಾವರಿ ವಿವಾದಗಳ ಬಗ್ಗೆ ಹಾಗೂ ಈ ಕುರಿತು ರಾಜ್ಯದ ಮುಂದಿನ ನಡೆಯ ಬಗ್ಗೆ ಸಭೆಯಲ್ಲಿ ಸುಧೀರ್ಘವಾಗಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಕರ್ನಾಟಕದ ನೆಲ, ಜಲ, ಭಾಷೆಯ ಹಿತರಕ್ಷಣೆಗೆ ಸರ್ವ ಪ್ರಯತ್ನ ಮಾಡಲಾಗುವುದು, ಈ ವಿಷಯದಲ್ಲಿ ಯಾವುದೇ ರೀತಿಯ ಆತಂಕಬೇಡ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.
ಇದೆ ತಿಂಗಳ 25 ನೇ ತಾರೀಖಿನಂದು ನವದೆಹಲಿಗೆ ತೆರಳಿ 26 ರಂದು ಎಲ್ಲಾ ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿಯ ಬಗ್ಗೆ ಚರ್ಚಿಸಲಾಗುವುದು. ಕೇಂದ್ರ ಆರೋಗ್ಯ, ಹಣಕಾಸು, ಜಲಶಕ್ತಿ , ಕೃಷಿ ಹಾಗೂ ರಕ್ಷಣಾ ಸಚಿವರ ಸಮಯ ಕೇಳಿದ್ದು, ಅವರನ್ನು ನವದೆಹಲಿಯಲ್ಲಿ ಭೇಟಿಯಾಗಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.
ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇರುವ ತಜ್ಞರ ಸಮಿತಿ ಮುಂದುವರೆಯಲಿದೆ. ಕೇಂದ್ರ ವಿಪತ್ತು ನಿರ್ವಹಣಾ ಸಮಿತಿ ಆಕ್ಟೋಬರ್ ತಿಂಗಳಲ್ಲಿ ರಾಜ್ಯಕ್ಕೆ ಬರಬಹುದು ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟರು.