ಬೆಂಗಳೂರು : ಕಲಬುರ್ಗಿ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಈ ಮೂರು ಮಹಾ ನಗರ ಪಾಲಿಕೆ, ತರೀಕೆರೆ, ದೊಡ್ಡಬಳ್ಳಾಪುರ ಹಾಗೂ ಮೈಸೂರಿನ ಪಾಲಿಕೆ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಮತ ನೀಡಿದ ಎಲ್ಲಾ ಮತದಾರರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಧನ್ಯವಾದ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ಈ ವಿಷಯ ತಿಳಿಸಿ ಅವರು, ಬೆಳಗಾವಿಯಲ್ಲಿ ನಿರೀಕ್ಷಿತ ಫಲಿತಾಂಶ ಬಂದಿಲ್ಲ, 58 ಸ್ಥಾನಗಳಲ್ಲಿ 9 ಸ್ಥಾನಗಳನ್ನು ಮಾತ್ರ ನಾವು ಗೆದ್ದಿದ್ದು, ಬಿಜೆಪಿ ಪಕ್ಷ ಬಹುಮತ ಗಳಿಸಿದೆ. ಹುಬ್ಬಳ್ಳಿಯಲ್ಲಿ ನಮ್ಮ ಪಕ್ಷ ಬಹುಮತ ಗಳಿಸುವ ನಿರೀಕ್ಷೆಯಿತ್ತು, ಆದರೆ ಫಲಿತಾಂಶ ಬೆರೆಯದೇ ರೀತಿ ಬಂದಿದೆ. ನಮ್ಮ ಪಕ್ಷ 33 ಸ್ಥಾನಗಳನ್ನು ಗೆದ್ದಿದ್ದರೆ, ಬಿಜೆಪಿ 39 ಸ್ಥಾನ ಗೆದ್ದಿದ್ದು, ಯಾವೊಂದು ಪಕ್ಷಕ್ಕೂ ಬಹುಮತ ಬಂದಿಲ್ಲ, ಇನ್ನು ಕಲಬುರ್ಗಿಯಲ್ಲಿ ನಮ್ಮ ಪಕ್ಷ 26, ಬಿಜೆಪಿ 24, ಜೆಡಿಎಸ್ 3 ಸ್ಥಾನ ಹಾಗೂ ಒಂದು ಪಕ್ಷೇತರ ಅಭ್ಯರ್ಥಿ ಗೆದ್ದಿದ್ದು. ಇಲ್ಲೂ ಸಹ ಯಾವ ಪಕ್ಷವೂ ಬಹುಮತ ಪಡೆದಿಲ್ಲ ಎಂದು ತಿಳಿಸಿದರು.
ಹುಬ್ಬಳ್ಳಿ ಧಾರವಾಡದಲ್ಲಿ ಕೇಂದ್ರ ಸಚಿವರಿದ್ದಾರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದ್ದಾರೆ, ಬಿಜೆಪಿಯ ಹಲವು ಮಂದಿ ಶಾಸಕರಿದ್ದಾರೆ. ಹೀಗಾಗಿ ನಮಗೆ ಹಿನ್ನೆಡೆಯಾಗಿದೆ ಎಂದು ಅವರು ವಿಶ್ಲೇಷಿಸಿದರು. ಸರ್ಕಾರ ಅವರ ಕೈಯಲ್ಲಿದೆ, ಸಂಪನ್ಮೂಲಗಳು ನಮಗಿಂತ ಹೆಚ್ಚು ಅವರ ಬಳಿಯಿದೆ. ಅಧಿಕಾರಿಗಳು ಅವರ ಪರವಾಗಿ ಕೆಲಸ ಮಾಡ್ತಾರೆ. ಕಲಬುರ್ಗಿ ಪೊಲೀಸ್ ಕಮಿಷನರ್ ನಮ್ಮ ಪಕ್ಷದ ಶಾಸಕರ ಸಂಬಂಧಿಕರಿಗೆ ಹೊಡೆದು, ಅಧಿಕಾರ ದುರ್ಬಳಕೆ ಮಾಡಿಕೊಳ್ಳುವ ಮೂಲಕ ಬಿಜೆಪಿ ಕಾರ್ಯಕರ್ತರಂತೆ ವರ್ತಿಸಿದ್ದಾರೆ. ಇಂತಹ ಹಲವು ಉದಾಹರಣೆಗಳಿವೆ ಎಂದು ಸಿದ್ದರಾಮಯ್ಯ ಅವರು ವಿವರಿಸಿದರು.
ಹುಬ್ಬಳ್ಳಿ ಧಾರವಾಡದಲ್ಲಿ ನಾವು 33 ಸ್ಥಾನಗಳನ್ನು ಗೆದ್ದಿರುವುದು ನಮಗೆ ಒಂದು ಧನಾತ್ಮಕ ಬೆಳವಣಿಗೆ. ಬೆಳಗಾವಿ ಅನಿರೀಕ್ಷಿತ ಫಲಿತಾಂಶ ಬಂದಿದೆ. ನಾವು ಹತ್ತು ಹನ್ನೆರಡು ಸ್ಥಾನ ಗೆಲ್ಲುವ ನಿರೀಕ್ಷೆ ಇತ್ತು ಆದರೆ ಒಂಭತ್ತು ಸ್ಥಾನ ಗೆದ್ದಿದ್ದೆವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಿಕೊಳ್ಳಬೇಕು. ನಾವು ಈ ಚುನಾವಣೆಯಲ್ಲಿ ಮತದಾರರು ನೀಡಿದ ತೀರ್ಪನ್ನು ಒಪ್ಪಿಕೊಂಡು, ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದುತಿಳಿಸಿದರು.
ಈ ಫಲಿತಾಂಶವನ್ನು ಮುಂದಿನ ತಾಲೂಕು, ಜಿಲ್ಲಾ ಪಂಚಾಯತ ಹಾಗೂ ಬಿಬಿಎಂಪಿ ಚುನಾವಣೆಗಳ ದಿಕ್ಸೂಚಿ ಎಂದು ಹೇಳಲು ಬರುವುದಿಲ್ಲ ಎಂದು ಅಭಿಪ್ರಾಯಪಟ್ಟ ಅವರು, ಈ ಹಿಂದೆ ಗ್ರಾಮ ಪಂಚಾಯತಿ ಚುನಾವಣೆ ವೇಳೆಯಲ್ಲೂ ಬಿಜೆಪಿಯವರು ಹೀಗೆಯೇ ಹೇಳಿದ್ದರು, ಆದರೆ ಹೆಚ್ಚು ಸ್ಥಾನವನ್ನು ನಾವು ಗೆದ್ದಿದ್ದೆವು. ಮುಂಬರುವ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲೂ ನಾವೇ ಗೆಲ್ಲುತ್ತೇವೆ ಎಂದರು.
ಬೆಳಗಾವಿಯಲ್ಲಿ ಬಿಜೆಪಿ ಬಹುಮತ ಗಳಿಸಿದ್ದರೆ, ಕಲಬುರ್ಗಿಯಲ್ಲಿ ನಾವು ಬಹುಮತ ಪಡೆದಿದ್ದೇವೆ. ಇನ್ನುಳಿದ ಕಡೆ ಯಾವ ಪಕ್ಷವೂ ಸ್ಪಷ್ಟ ಬಹುಮತ ಪಡೆದಿಲ್ಲ ಹೀಗಾಗಿ ಇದು ಕಾಂಗ್ರೆಸ್ನ ಸೋಲಲ್ಲ. ಈ ಫಲಿತಾಂಶ ಬಿಜೆಪಿಗೆ ಎಚ್ಚರಿಕೆಯ ಗಂಟೆ ಎಂಬುದು ನನ್ನ ಭಾವನೆ ಎಂದು ತಿಳಿಸಿದರು.
ನಾನು ಯಾವತ್ತೂ ಪಾಲಿಕೆ ಚುನಾವಣೆಯ ಪ್ರಚಾರಕ್ಕೆ ಹೋಗಿಲ್ಲ, ಹಾಗೆ ಈ ಬಾರಿಯೂ ಹೋಗಿಲ್ಲ. ಇದರಲ್ಲಿ ಹೊಸತೇನಿದೆ? ನಾನು ಚುನಾವಣಾ ಪ್ರಚಾರಕ್ಕೆ ಹೋಗದಿರುವುದು ಚುನಾವಣೆಗೆ ಮೊದಲೇ ಸೋಲೊಪ್ಪಿಕೊಂಡಂತೆ ಎಂದು ಹೇಳುವ ನಳಿನ್ ಕುಮಾರ್ ಕಟೀಲ್ ಕಲಬುರಗಿ, ಹುಬ್ಬಳ್ಳಿ, ಧಾರವಾಡಕ್ಕೆ ಎಷ್ಟು ಬಾರಿ ಚುನಾವಣಾ ಪ್ರಚಾರಕ್ಕೆ ಹೋಗಿದ್ದಾರೆ? ಸ್ಥಳೀಯ ಸಂಸ್ಥೆಗಳ ಚುನಾವಣೆಯ ಜವಾಬ್ದಾರಿ ಸ್ಥಳೀಯ ನಾಯಕರು ಮಾಡ್ತಾರೆ, ಅದಕ್ಕೆ ರಾಜ್ಯ ಮಟ್ಟದ ನಾಯಕರು ಯಾರು ಹೋಗಲ್ಲ ಎಂದರು.
ತಾಲಿಬಾನಿಗಳಿಂದ ಭಾರತದಲ್ಲಿ ಬೆಲೆಯೇರಿಕೆ ಆಗುತ್ತಿದೆ ಎಂಬ ಅರವಿಂದ ಬೆಲ್ಲದ್ ಹೇಳಿಕೆ ದಡ್ಡತನದ ಪರಮಾವಧಿ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ ಆಗಿದೆಯಾ ಎಂಬುದು ಮುಖ್ಯ ಎಂದು ತಿಳಿಸಿದರು..
ಈಗ ಕಚ್ಚಾ ತೈಲ ಬೆಲೆ ಎಷ್ಟಿದೆ? ಹಿಂದೆ ಮನಮೋಹನ್ ಸಿಂಗ್ ಅವರ ಸರ್ಕಾರ ಇದ್ದಾಗ ಎಷ್ಟಿತ್ತು ಎಂದು ನೋಡಬೇಕಲ್ಲವೇ? ಹಿಂದೆ ಕಚ್ಚಾ ತೈಲ ದರ ಬ್ಯಾರಲ್ ಒಂದಕ್ಕೆ 120 ಡಾಲರ್ ದಾಟಿತ್ತು ಆಗ ಪೆಟ್ರೋಲ್ ಬೆಲೆ 71 ರೂಪಾಯಿ ಇತ್ತು, ಈಗ ಕಚ್ಚಾ ತೈಲ ಬೆಲೆ ಬ್ಯಾರಲ್ ಗೆ 45 ಡಾಲರ್ ಇದೆ, ಪೆಟ್ರೋಲ್ ಬೆಲೆ 105 ರೂಪಾಯಿ ಆಗಿದೆ. ಇದು ಜನರ ಮೇಲಿನ ಅನಗತ್ಯ ಹೊರೆಯಲ್ಲವೇ? 80 ರೂಪಾಯಿ ಇದ್ದ ಅಡುಗೆ ಎಣ್ಣೆ 200 ರೂಪಾಯಿ ಆಗಿದೆ, ಇದಕ್ಕೆ ತಾಲಿಬಾನಿಗಳು ಕಾರಣವೇ? ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿ, ಪೆಟ್ರೋಲ್ ದರ ಏರಿಕೆಗೆ ತಾಲಿಬಾನಿಗಳು ಕಾರಣ ಎಂದರೆ ಹೇಗೆ? ಎಂದು ತರಾಟೆಗೆ ತೆಗೆದುಕೊಂಡರು.