ಜಮ್ಮು: ಕಾಂಗ್ರೆಸ್ ನ ಮಾಜಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಬೆಳಗ್ಗೆ ಮಾತಾ ವೈಷ್ಣೋದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಜಮ್ಮುವಿನ ಕತ್ರಾದಿಂದ ಸುಮಾರು 14 ಕಿಲೋ ಮೀಟರ್ ದೂರದಲ್ಲಿರುವ ವೈಷ್ಣೋದೇವಿ ದೇವಾಲಯಕ್ಕೆ ಕಾಲ್ನಡಿಗೆಯಲ್ಲಿ ತೆರಳಿ ದೇವರ ದರ್ಶನ ಪಡೆದರು.
ತ್ರಿಕುಟಾ ಬೆಟ್ಟದಲ್ಲಿರುವ ಹೆಸರಾಂತ ಯಾತ್ರಾ ಸ್ಥಳ ವೈಷ್ಣೋದೇವಿ ಗುಹೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾಲ್ನಡಿಗೆಯಲ್ಲಿ ತೆರಳಿ ಪೂಜೆ ಸಲ್ಲಿಸಿದ್ದಾರೆ. ಹಲವಾರು ವರ್ಷಗಳ ನಂತರ ಈ ಪವಿತ್ರ ಸ್ಥಳಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲು ಎಂದು ಸ್ಥಳೀಯರ ಮುಖಂಡರು ತಿಳಿಸಿದ್ದಾರೆ.
ದೇವಿಯ ಮಂದಿರಕ್ಕೆ ಪೂಜೆ ಸಲ್ಲಿಸಲು ಬಂದಿದ್ದೇನೆ, ಇಲ್ಲಿ ಯಾವುದೇ ರೀತಿಯ ರಾಜಕೀಯ ಮಾತನಾಡಲು ಇಷ್ಟಪಡುವುದಿಲ್ಲ ಎಂದು ರಾಹುಲ್ ಮಾಧ್ಯಮದವರಿಗೆ ತಿಳಿಸಿದರು.
ಎರಡು ದಿನಗಳ ಭೇಟಿಗಾಗಿ ಜಮ್ಮುಗೆ ಆಗಮಿಸಿರುವ ಅವರನ್ನು ಜಮ್ಮು ವಿಮಾನ ನಿಲ್ದಾಣದಲ್ಲಿ ಸ್ಥಳೀಯ ಕಾಂಗ್ರೆಸ್ ಘಟಕದ ಮುಖಂಡರು ಆತ್ಮೀಯವಾಗಿ ಬರಮಾಡಿಕೊಂಡರು.




