ಉರಿವ ಮನೆಯಲ್ಲಿ ಗಳ ಹಿರಿಯುವ ಕೆಲಸ ಮಾಡಬಾರದು : ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಟೀಕೆ

ಬೆಂಗಳೂರು : ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ನಿರಂತರವಾಗಿ ಏರಿಸುವ ಮೂಲಕ ಉರಿವ ಮನೆಯಲ್ಲಿ ಗಳ ಹಿರಿಯುವ ಕೆಲಸ ಆಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಾಪ್ರಹಾರ ನಡೆಸಿದರು.

ವಿಧಾನಸಭೆಯಲ್ಲಿಂದು ನಿಯಮ-69ರ ಅಡಿಯಲ್ಲಿ ಬೆಲೆ ಏರಿಕೆ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನೆರೆ, ಕೋವಿಡ್ʼನಿಂದ ಸಾಮಾನ್ಯ ಜನರು ತತ್ತರಿಸಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ನಿರಂತರ ಬೆಲೆ ಏರಿಕೆಯಿಂದ ರೈತರು, ಬಡವರು ಮತ್ತು ಶ್ರಮಿಕರ ಮನೆಗಳಲ್ಲಿ ಬೆಂಕಿ ಬಿದ್ದಿದೆ. ಆ ಬೆಂಕಿ ಬಿದ್ದಿರುವ ಮನೆಗಳಲ್ಲಿ ಎಷ್ಟು ಗಳ ಹಿರಿಯಬಹುದು ಎಂಬ ಉದ್ದೇಶದಿಂದ ಇಷ್ಟು ತೆರಿಗೆ ಹಾಕಿದಂತಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

ಅಲ್ಲದೆ ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ಇಂಧನ ಬೆಲೆ ಏರಿಕೆ ಹಾಗೂ ಕೋವಿಡ್ʼನಿಂದ ತತ್ತರಿಸಿರುವ ಜನರ ಬದುಕು ಮರಳಿ ಕಟ್ಟಿಕೊಳ್ಳಲು ಒಂದೇ  ಬಾರಿಗೆ ಅನ್ವಯವಾಗುವಂತೆ 55 ಲಕ್ಷ ಕುಟುಂಬಗಳಿಗೆ ತಲಾ 25,000 ರೂ. ಪರಿಹಾರ ನೀಡುವಂತೆ ಅವರು ಸರಕಾರವನ್ನು ಆಗ್ರಹಪಡಿಸಿದ್ದಾರೆ.

ಈ ವರ್ಷವನ್ನು ʼಕೋವಿಡ್ ವರ್ಷʼ ಎಂದು ಘೋಷಣೆ ಮಾಡಬೇಕೆಂದು ಆಗ್ರಹಿಸಿದ ಕುಮಾರಸ್ವಾಮಿ, ಅಗತ್ಯಬಿದ್ದರೆ ಈ ವರ್ಷ ಎಲ್ಲ ಅಭಿವೃದ್ಧಿ ಕೆಲಸಗಳನ್ನು ನಿಲ್ಲಿಸಿ ಎಂದು ಮನವಿ ಮಾಡಿದರು. ಈ ಬೆಲೆ ಏರಿಕೆಯನ್ನೂ ಯಾರೂ ಒಪ್ಪಲು ಸಾಧ್ಯವೇ ಇಲ್ಲ. ಇದು ಅತ್ಯಂತ ನಿರ್ದಯವಾದ ಕೆಲಸ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸುವುದು ಸರಕಾರದ ಕೆಲಸ. ಕೂಡಲೇ ಕೇಂದ್ರ ಮತ್ತು ರಾಜ್ಯ ಸರಕಾರಗಳು ಎಚ್ಚೆತ್ತುಕೊಳ್ಳಬೇಕು ಎಂದು ಆಗ್ರಹಿಸಿದರು.

ಸರಕಾರಕ್ಕೆ ಆದಾಯವೂ ಮುಖ್ಯ, ನಿಜ. ಅದೇ ರೀತಿ ಜನರ ಕಲ್ಯಾಣವೂ ಮುಖ್ಯ. ಹಾಗಂತ ಮನಸೋ ಇಚ್ಛೆ ತೆರಿಗೆ ಹಾಕುವುದಲ್ಲ. ಜನರಿಗೆ ಬದುಕೇ ದುಸ್ಥರವಾಗಿದೆ. ಎರಡು ಹೊತ್ತು ಊಟಕ್ಕೂ ಕಷ್ಟವಾಗಿದೆ. ಇಂಥ ತೀವ್ರ ಸಂಕಷ್ಟದ ಸಮಯದಲ್ಲಿ ಜನರ ಮೇಲೆ ಬೆಲೆ ಏರಿಕೆ ಮತ್ತು ತರಿಗೆ ಪ್ರಹಾರ ನಡೆಸುವುದು ಎಷ್ಟು ಸರಿ? ಎಂದು ಪ್ರಶ್ನಿಸಿದರು.

ಬೆಲೆ ಏರಿಕೆ ಮಾಡುವುದು ಎಂದರೆ ನಿರಂತರವಾಗಿ ಹತೋಟಿ ಇಲ್ಲದೆ ಮಾಡುವುದಲ್ಲ. ಅದಕ್ಕೆ ಒಂದು ವೈಜ್ಞಾನಿಕ ಮಾನದಂಡದ ಜತೆಗೆ ಜನರ ಪರಿಸ್ಥಿತಿಯನ್ನೂ ನೋಡಿ ನಿರ್ಧಾರ ಕೈಗೊಳ್ಳುವ ವಿವೇಚನೆ ಇರಬೇಕು. ಅದು ಬಿಟ್ಟು ಇಷ್ಟಬಂದ ಹಾಗೆ ಬೆಲೆ ಏರಿಕೆ ಮಾಡುತ್ತಾ ಹೋದರೆ ಸಾಮಾನ್ಯ ಜನರ ಪಾಡೇನು? ಎಂದು ಪ್ರಶ್ನಿಸಿದರು.

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ನಿಮಿತ್ತ ಸರಕಾರ ಕೆಲ ಯೋಜನೆಗಳನ್ನು ಘೋಷಣೆ ಮಾಡಿದೆ. ಆದರೆ, ಬೆಲೆ ಏರಿಯಿಂದ ಬಸವಳಿದಿರುವ ಜನರ ನೆರವಿಗೆ ಧಾವಿಸಲು ಆ ಹಣ ಮೀಸಲಿಟ್ಟು ಆ ಎಲ್ಲ ಯೋಜನೆಗಳನ್ನು ಒಂದು ವರ್ಷ ಮುಂದಕ್ಕೆ ಹಾಕಿ. ಈ ವರ್ಷವನ್ನು ʼಕೋವಿಡ್ ವರ್ಷʼವೆಂದು ಘೋಷಣೆ ಮಾಡಲಿ. ಎಲ್ಲ ಅಭಿವೃದ್ಧಿ ಕೆಲಸಗಳನ್ನು ನಿಲ್ಲಿಸಿ ಜನರ ನೆರವಿಗೆ ಧಾವಿಸಲಿ ಎಂದು ಆಗ್ರಹಿಸಿದರು.

ಅಕ್ಕಿಭಾಗ್ಯದ ಅಸಲಿಯೆತ್ತು ಬಿಚ್ಚಿಟ್ಟ ಎಚ್ಡಿಕೆ

ತಮ್ಮ ನೇತೃತ್ವದಲ್ಲಿ ಜೆಡಿಎಸ್-ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗ ನಡೆದ ಅಕ್ಕಿಭಾಗ್ಯದ ಅಸಲಿ ಕಥೆಯನ್ನು ಸದನದಲ್ಲಿ ಬಿಚ್ಚಿಟ್ಟರು ಹೆಚ್.ಡಿ.ಕುಮಾರಸ್ವಾಮಿ.

“ನನ್ನ ಸರಕಾರ ಬಂದಾಗ ಜನರಿಗೆ ಐದು ಕೆಜಿ ಅಕ್ಕಿಯನ್ನು ನೀಡಲಾಯಿತು. ಇದ್ದಕ್ಕಿದ್ದಂತೆ ಕಾಂಗ್ರೆಸ್ ನಾಯಕರು ದೊಡ್ಡ ಹುಯಿಲೆಬ್ಬಿಸಿದರು. ಐದು ಕೆಜಿ ಬದಲು ಏಳು ಕೆಜಿಯನ್ನೇ ಕೊಡಬೇಕು ಎಂದು ಹಠಕ್ಕೆ ಬಿದ್ದರು. ಆದರೆ, ಹಣಕಾಸು ಲಭ್ಯತೆ ನೋಡಿದರೆ ಕೇವಲ ಐದು ಕೆಜಿ ಅಕ್ಕಿಗೆ ಮಾತ್ರ ಹಣ ತೆಗೆದಿರಿಸಲಾಗಿತ್ತು.”

“ಉಳಿದ ಎರಡು ಕೆಜಿ ಅಕ್ಕಿಗೆ ಹಣ ತರುವುದು ಎಲ್ಲಿಂದ? ಚುನಾವಣೆಗೆ ಹೋಗುವ ಮುನ್ನ ಸಿದ್ದರಾಮಯ್ಯ ಅವರು ಫೆಬ್ರವರಿಯಲ್ಲಿ ಬಜೆಟ್ ಮಂಡಿಸಿ ಐದು ಕೆಜಿ ಅಕ್ಕಿಗಷ್ಟೇ ಹಣ ಮೀಸಲಿಟ್ಟು ಹೋಗಿದ್ದರು. ಸಮ್ಮಿಶ್ರ ಸರಕಾರ ಬಂದಾಗ ಇದೇ ಜನ ಏಳು ಕೆಜಿ ಅಕ್ಕಿ ಕೊಡಬೇಕು ಎಂದು ಬೊಬ್ಬೆ ಹೊಡೆದರು. ಕೇವಲ ಚುನಾವಣೆಯಲ್ಲಿ ಮತ ಪಡೆಯುವ ಉದ್ದೇಶದಿಂದ ಮಾಡಿದ ಕೆಲಸಕ್ಕೆ ಜನ ನಮ್ಮನ್ನು ಟೀಕೆ ಮಾಡುವಂತಾಯಿತು” ಎಂದು ಎಚ್ಡಿಕೆ ಹೇಳಿದರು.

“ಆಗ ನನಗೆ ಎಂಥ ಸಂದಿಗ್ಧತೆ ಎಂದರೆ, ಏಳು ಕೆಜಿ ಅಕ್ಕಿ ಕೊಡಲೇಬೇಕು, ಕೊಡೋಕೆ ದುಡ್ಡಿಲ್ಲ. ನಾವು ಘೋಷಣೆ ಮಾಡಿದ್ದೇವೆ, ನಿಲ್ಸಂಗಿಲ್ಲ ಎನ್ನುವ ಒತ್ತಡ ತಂತ್ರ ಬೇರೆ. ರಾಜ್ಯದ ಜನರಿಗೆ ಈ ಸತ್ಯಸಂಗತಿ ಗೊತ್ತಿಲ್ಲ. ಈಗ ಹೇಳುತ್ತಿದ್ದೇನೆ” ಎಂದು ಅವರು ಅಕ್ಕಿಭಾಗ್ಯದ ಅಸಲಿಯೆತ್ತನ್ನು ಬಯಲು ಮಾಡಿದರು.

More News

You cannot copy content of this page