ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ – ಬಿಜೆಪಿ ಸರ್ಕಾರ ತೊಲಗಬೇಕು : ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು : ಬೆಲೆ ಏರಿಕೆಯಿಂದ ಜನರ ಆಕ್ರೋಶ ಒಳಗೊಳಗೆ ಕುದಿಯುತ್ತಿದೆ. ಈ ಸರ್ಕಾರ ತೊಲಗಿದರೆ ಸಾಕು, ಮತ್ತೆ ಚುನಾವಣೆ ಬಂದರೆ ಸಾಕು ಎಂದು ಕಾಯುತ್ತಿದ್ದಾರೆ. ಒಬ್ಬ ಯಡಿಯೂರಪ್ಪ ಅಲ್ಲ, ಯಡಿಯೂರಪ್ಪ ಅವರಂತಹ ನೂರು ಜನ ಬಂದರೂ ಬಿಜೆಪಿಯನ್ನು ಉಳಿಸಲಿಕ್ಕೆ ಸಾಧ್ಯವಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟಿಕೀಸಿದ್ದಾರೆ.
ಕೇಂದ್ರ ಸರಕಾರದ ನಿರಂತರ ಇಂಧನ ಬೆಲೆ ಹೆಚ್ಚಳ ಹಾಗೂ ತತ್ಪರಿಣಾಮವಾಗಿ ದಿನ ಬಳಕೆ ವಸ್ತುಗಳ ದರ ಏರಿಕೆ ಖಂಡಿಸಿ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದವರೆಗೆ ನಡೆದ ಸೈಕಲ್ ಜಾಥಾದಲ್ಲಿ ಭಾಗವಹಿಸಿದ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಪ್ರತಿಭಟನೆ ಅಥವಾ ಸರ್ಕಾರದ ವಿರುದ್ಧ ಮಾತನಾಡಿದರೆ, ಸರ್ಕಾರ ಕೇಸ್ ಹಾಕುತ್ತದೆ ಎಂಬ ಕಾರಣಕ್ಕೆ ಇದನ್ನೆಲ್ಲ ಸಹಿಸಿಕೊಂಡು ಜನ ಸುಮ್ಮನಿದ್ದಾರೆ. ನರೇಂದ್ರ ಮೋದಿ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಯಾರಿಂದಲೂ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಸಾಧ್ಯವಿಲ್ಲ. ಮುಂದಿನ ಚುನಾವಣೆಯಲ್ಲಿ ಜನ ಬಿಜೆಪಿಯನ್ನು ಮನೆಗೆ ಕಳಿಸಿ, ತಕ್ಕ ಪಾಠ ಕಲಿಸುತ್ತಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಮೇಲೆ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಜನರ ಜೇಬಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೈಹಾಕಿವೆ ಎಂದು ಆರೋಪಿಸಿದರು. ಈ ಹಿಂದೆ ಯು.ಪಿ.ಎ ಸರ್ಕಾರದ ಅವಧಿಯಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ 120 ಡಾಲರ್ ಗಿಂತ ಹೆಚ್ಚಿದ್ದರೂ ದೇಶದಲ್ಲಿ ಡೀಸೆಲ್ ಬೆಲೆ ರೂ.47 ಇತ್ತು, ಹಾಗಾಗಿ ಅಗತ್ಯ ವಸ್ತುಗಳ ಬೆಲೆ ಕಡಿಮೆಯಿತ್ತು. ಪೆಟ್ರೋಲ್ ಬೆಲೆ ಕೂಡ ರೂ. 75 ರ ಗಡಿಯೊಳಗೆ ಇತ್ತು ಎಂದು ಸ್ಪಷ್ಟನೆ ನೀಡಿದರು.
ನರೇಂದ್ರ ಮೋದಿ ಅವರ ಸರ್ಕಾರ ಡೀಸೆಲ್, ಪೆಟ್ರೋಲ್ ಹಾಗೂ ಗ್ಯಾಸ್ ಮೇಲಿನ ಅಬಕಾರಿ ಸುಂಕದ ಮೂಲಕ ಒಟ್ಟು ರೂ. 23 ಲಕ್ಷ ಕೋಟಿ ತೆರಿಗೆ ಸಂಗ್ರಹ ಮಾಡಿದೆ ಎಂದು ಆರೋಪಿಸಿದರು.
2020-21 ರ ಸಾಲಿನಲ್ಲಿ ರೂ. 3 ಲಕ್ಷ 35 ಸಾವಿರ ಕೋಟಿ ಅಬಕಾರಿ ಸುಂಕ ಸಂಗ್ರಹಿಸಲಾಗಿದೆ. ಕಳೆದ ಏಳು ವರ್ಷಗಳಲ್ಲಿ ಕರ್ನಾಟಕ ರಾಜ್ಯವೊಂದರಿಂದಲೇ 1 ಲಕ್ಷದ 20 ಸಾವಿರ ಕೋಟಿ ತೆರಿಗೆ ಸಂಗ್ರಹವಾಗಿದೆ.
ಮುಖ್ಯಮಂತ್ರಿಗಳು ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆಗೆ ತೈಲ ಬಾಂಡ್ ಕಾರಣ ಎಂಬ ಉತ್ತರ ನೀಡಬಹುದು ಆದರೆ 2006 ರಿಂದ 2010 ರವರೆಗೆ ಒಟ್ಟು ರೂ. 1 ಲಕ್ಷದ 40 ಸಾವಿರ ಕೋಟಿ ತೈಲ ಬಾಂಡ್ ಖರೀದಿ ಮಾಡಲಾಗಿದೆ. ಆಮೇಲೆ ತೈಲ ಬಾಂಡ್ ತೆಗೆದುಕೊಳ್ಳುವುದನ್ನು ನಿಲ್ಲಿಸಲಾಯಿತು.
ಈ ಸರ್ಕಾರ ತೈಲ ಬಾಂಡ್ ಗೆ ಕಟ್ಟಿರುವ ಹಣ ಕೇವಲ ರೂ. 3,500 ಕೋಟಿ. ಪ್ರತೀ ವರ್ಷದ ಬಡ್ಡಿಯಂತೆ ಕಳೆದ ಏಳು ವರ್ಷಗಳಲ್ಲಿ ರೂ.70,000 ಕೋಟಿ ಕೊಟ್ಟಿದ್ದಾರೆ. ಈ ಸರ್ಕಾರ ತೀರಿಸಬೇಕಾದ ಬಾಂಡ್ ಹಣ ರೂ. 1,30,923 ಕೋಟಿ. ರೂ. 5,762 ಕೋಟಿ ತೈಲಬಾಂಡ್ ಮೇಲಿನ ಸಾಲವನ್ನು ಮನಮೋಹನ್ ಸಿಂಗ್ ಅವರ ಸರ್ಕಾರವೇ ತೀರಿಸಿದೆ ಎಂದು ತಿಳಿಸಿದರು.

ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯಲ್ಲಿ ರೂ. 3 ಕಡಿಮೆ ಮಾಡಿದ್ದಾರೆ. ನಮ್ಮ ರಾಜ್ಯ ಸರ್ಕಾರ ಯಾಕೆ ಈ ರೀತಿ ತೆರಿಗೆ ಕಡಿತಗೊಳಿಸಬಾರದು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ರೀತಿ ತೆರಿಗೆ ಕಡಿತ ಮಾಡಿದರೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಯುವ ಜೊತೆಗೆ ಕಬ್ಬಿಣ, ಸಿಮೆಂಟ್, ಬಸ್ ಪ್ರಯಾಣದರ, ಅಗತ್ಯ ವಸ್ತುಗಳ ಬೆಲೆ, ಹೋಟೆಲ್ ಬಿಲ್ ಎಲ್ಲವೂ ಕಡಿಮೆಯಾಗುತ್ತದೆ ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡುತ್ತಾರೆ ಎಂಬ ನಿರೀಕ್ಷೆ ಇಲ್ಲ. ಭಂಡ ಸರ್ಕಾರ ಇದು. ಇವತ್ತು ಆಟೋ ಚಾಲಕರು, ಕ್ಯಾಬ್ ಚಾಲಕರು, ಟ್ರ್ಯಾಕ್ಟರ್ ಇರುವ ರೈತರು, ಬಸ್ ಮಾಲೀಕರು, ಲಾರಿ ಮಾಲೀಕರು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ ಎಂದು ಆರೋಪಿಸಿದರು.

More News

You cannot copy content of this page