ಬೆಂಗಳೂರು: ಮುಂದಿನ 5 ವರ್ಷಗಳಲ್ಲಿ ಮಲೈ ಮಹದೇಶ್ವರ ದಕ್ಷಿಣ ಕರ್ನಾಟಕ ಮಾತ್ರವಲ್ಲದೆ, ದಕ್ಷಿಣ ಭಾರತದಲ್ಲಿ ಪ್ರಮುಖ ಯಾತ್ರಾ ಸ್ಥಳವಾಗಿ ಅಭಿವೃದ್ಧಿ ಹೊಂದಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಲೈ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಲೈ ಮಹದೇಶ್ವರ ದಕ್ಷಿಣ ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರ. ಮೈಸೂರಿನಿಂದ ಬೆಂಗಳೂರಿನವರೆಗೆ ಪ್ರತಿಯೊಬ್ಬರೂ ನನೆದುಕೊಳ್ಳುವ ಧಾರ್ಮಿಕ ಕ್ಷೇತ್ರ.
ಇತ್ತೀಚಿನ ದಿನಗಳಲ್ಲಿ ಇದರ ಅಭಿವೃದ್ಧಿಗೆ ಚಿಂತನೆ ನಡೆದು ವೇಗವನ್ನೂ ಪಡೆದುಕೊಂಡಿದೆ. ಇದಕ್ಕೆ ಮುಖ್ಯ ಕಾರಣ ನಮ್ಮ ನಾಯಕ ಬಿ.ಎಸ್.ಯಡಿಯೂರಪ್ಪ ಅವರು. ಪ್ರಾಧಿಕಾರ ರಚಿಸಿದ್ದಲ್ಲದೆ ದೊಡ್ಡ ಪ್ರಮಾಣದಲ್ಲಿ ಅನುದಾನವನ್ನೂ ಅವರು ಒದಗಿಸಿದ್ದಾರೆ ಎಂದು ತಿಳಿಸಿದರು.
ಸಾವಿರಾರು ಭಕ್ತರು ಬರುವ ಕ್ಷೇತ್ರಕ್ಕೆ ಸೌಲಭ್ಯಗಳ ಜೊತೆಗೆ ಕೋವಿಡ್ ಸಂದರ್ಭದಲ್ಲಿ ಸರಿಯಾದ ಮಾರ್ಗರ್ಶನವೂ ಅಗತ್ಯ. ಶ್ರೀ ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಶೀಘ್ರದಲ್ಲಿಯೇ ಕ್ಷೇತ್ರಕ್ಕೆ ಭೇಟಿ ನೀಡಿ ಸರ್ವಾಂಗೀಣ ಅಭಿವೃದ್ಧಿಗೆ ಎಲ್ಲ ಸಹಕಾರ ನೀಡುವುದಾಗಿ ಭರವಸೆಯಿತ್ತರು.
ಸಭೆಯಲ್ಲಿ ಸಚಿವರಾದ ಸುನೀಲ್ ಕುಮಾರ, ಶಶಿಕಲಾ ಜೊಲ್ಲೆ, ಎಸ್.ಟಿ.ಸೋಮಶೇಖರ್, ಶಾಸಕ ಎನ್.ಮಹೇಶ್ ಸೇರಿದಂತೆ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.