ಬೆಂಗಳೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಹಬ್ಬಕ್ಕೆ ರಾಜ್ಯ ಸರ್ಕಾರ ಕೊವಿಡ್ ನಿಯಮಾವಳಿಗಳನ್ನು ರೂಪಿಸಿ ಜಾರಿ ಮಾಡಿದೆ. ನಾಡಹಬ್ಬದ ಸಂದರ್ಭದಲ್ಲಿ ಪ್ರತಿಯೊಬ್ಬರು ಗೈಡ್ ಲೈನ್ ಅನ್ನು ಪಾಲಿಸಬೇಕು ಎಂದು ಸರ್ಕಾರ ಆದೇಶದಲ್ಲಿ ಎಚ್ಚರಿಕೆ ನೀಡಿದೆ.

ನಾಡಹಬ್ಬ ಜಂಬೂಸವಾರಿಗೆ ಕೇವಲ 500ದ ಜನರು ಮಾತ್ರ ಸೇರಲು ಅವಕಾಶ ನೀಡಿದೆ. ಚಾಮುಂಡಿ ಬೆಟ್ಟದಲ್ಲಿ ನಡೆಯುವ ಚಾಮುಂಡೇಶ್ವರಿ ಪೂಜೆಗೆ ಕೇವಲ ೧೦೦ ಜನರಿಗೆ ಮಾತ್ರ ಅವಕಾಶ ನೀಡಿದೆ. ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ದೀಪಾಲಾಂಕಾರಕ್ಕೆ ೫೦೦ ಜನರ ಮಿತಿ ವಿಧಿಸಿದೆ. ಕಾರ್ಯಕ್ರಮಗಳಲ್ಲಿ ಭಾಗವಹಿಸುವವರು ಕಡ್ಡಾಯವಾಗಿದೆ ಒಂದು ಡೋಸ್ ಲಸಿಕೆ ಪಡೆದಿರಬೇಕು ಎಂದು ನಿಯಮಾವಳಿಯಲ್ಲಿ ತಿಳಿಸಿದೆ.

ಸಾಂಸ್ಕ್ರತಿಕ ಕಾರ್ಯಕ್ರಮ ನೀಡಲು ಸ್ಥಳೀಯ ಕಲಾವಿದರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಹೊರಗಿನಿಂದ ಬರುವವರು ಆರ್ ಟಿಪಿಸಿಆರ್ ಟೆಸ್ಟ್ ಹಾಗೂ ಕೋವಿಡ್ ಲಸಿಕೆ ಪಡೆದಿರಬೇಕು ಎಂದು ಸೂಚಿಸಿದೆ.

ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯವಾಗಿ ಮಾಡತಕ್ಕದ್ದು ಎಂದು ತಿಳಿಸಿರುವ ರಾಜ್ಯ ಸರ್ಕಾರ, ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಬೇಕು. ತಪ್ಪಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲು ಮೈಸೂರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿ ಆದೇಶ ಹೊರಡಿಸಿದೆ.
