ಶಿಕ್ಷಣ ಸಂಸ್ಥೆಗಳು ಮಕ್ಕಳಲ್ಲಿ ರಾಷ್ಟ್ರೀಯ ಭಾವನೆ ಬೆಳೆಸುವ ಕೇಂದ್ರಗಳಾಗಬೇಕು: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಶಿಕ್ಷಣ ಸಂಸ್ಥೆಗಳು ನಿಗದಿಪಡಿಸಿರುವ ಸಮವಸ್ತ್ರ ಹೊರತುಪಡಿಸಿ ಕೇಸರಿ ಶಾಲಾಗಲಿ, ಇಜಾಬ್ ಆಗಲಿ ಧರಿಸಬಾರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ವಿಧಾನಸೌಧದ ಮುಂಭಾಗ ರಾಜ್ಯ ವಿಪತ್ತು ಸ್ಪಂದನಾಪಡೆಯ ನೂತನ ವಾಹನಗಳ ಲೋಕಾರ್ಪಣೆ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಸಂಸ್ಥೆಗಳಲ್ಲಿ ವಿವಾದ ಬೇಡ. ಮತೀಯತೆ ಬಿಟ್ಟು ವಿಶಾಲ ಮನೋಭಾವವಿರಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರವೇ ಕಡ್ಡಾಯವೇ ಹೊರತು ಬೇರೇನೂ ಅಲ್ಲ. ಶಿಕ್ಷಣ ಸಂಸ್ಥೆಯಲ್ಲಿ ಧರ್ಮ, ಜಾತಿ ಮೀರಿ ಎಲ್ಲರೂ ಒಂದೇ ಎಂಬ ಭಾವನೆ, ಭಾರತ ಮಾತೆಯ ಮಕ್ಕಳು ಎಂಬ ರಾಷ್ಟ್ರಪ್ರೇಮ ಇರಬೇಕು. ಪೂಜೆ, ಧಾರ್ಮಿಕ ಕಾರ್ಯಗಳು ದೇವಾಲಯ, ಮಸೀದಿಗಳಲ್ಲಿರಲಿ. ಶಾಲೆಗಳಲ್ಲಿ ದೇಶದ ಏಕತೆ, ಸಮಗ್ರತೆ ಬಗ್ಗೆ ಸಂಸ್ಕಾರ ಇರಬೇಕು ಎಂದರು.
ಮತೀಯ ಸಂಘಟನೆಗಳ ಬಗ್ಗೆ ಗಮನ ಹರಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದ್ದು, ಏಕತೆಗೆ ಅಡ್ಡಗಾಲು ಹಾಕುವ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ನೇತಾಜಿ ಸುಭಾಷ್‍ಚಂದ್ರಬೋಸ್ ಹೆಸರಿನಲ್ಲಿ ತರಬೇತಿ ಸಂಸ್ಥೆ
ಇದಕ್ಕೂ ಮುನ್ನ ವಿಪತ್ತು ಸ್ಪಂದನಾ ಪಡೆಯ ಆ್ಯಂಬುಲೆನ್ಸ್, ಜೀಪು, ಸರಕು ಸಾಗಾಣಿಕೆಯ ವಾಹನ, ಜನರೇಟರ್ ಒಳಗೊಂಡ ಟ್ರಕ್ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಗೃಹ ಸಚಿವರು, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹೆಸರಿನಲ್ಲಿ ವಿಪತ್ತು ಸ್ಪಂದನಾ ಪಡೆಯ ತರಬೇತಿ ಸಂಸ್ಥೆಯೊಂದನ್ನು ಸ್ಥಾಪಿಸಲಾಗುವುದು ಎಂದರು.

ರಾಜ್ಯ ವಿಪತ್ತು ಸ್ಪಂದನಾ ಪಡೆಯ ಕೇಂದ್ರೀಯ ತರಬೇತಿ ಅಕಾಡೆಮಿಯನ್ನು ದೊಡ್ಡಬಳ್ಳಾಪುರದಲ್ಲಿರುವ ಅಗ್ನಿಶಾಮಕ ಪಡೆಯ 20 ಎಕರೆ ಜಾಗದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ನೇತಾಜಿ ಅವರ 125ನೇ ಜಯಂತಿ ಸಂದರ್ಭದಲ್ಲಿ ಮುಂದಿನ ತಲೆಮಾರಿಗೆ ಅವರ ಆದರ್ಶಗಳನ್ನು ನೆನಪಿಸುವಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಅತಿವೃಷ್ಟಿ, ಅನಾವೃಷ್ಟಿ, ಪ್ರಾಕೃತಿಕ ಹಾಗೂ ಮಾನವ ನಿರ್ಮಿತ ಅವಘಡ ನಿರ್ವಹಿಸಲು ವಿಶೇಷ ಕಾರ್ಯಪಡೆಯ ಅಗತ್ಯವಿದೆ. ಸಿಬ್ಬಂದಿ ಕೊರತೆ ನೀಗಿಸಲು ನಿಯೋಜನೆ ಮೇಲೆ ಸಿಬ್ಬಂದಿ ಒದಗಿಸಲು ಪೊಲೀಸ್ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಮತ್ತು ವಿಪತ್ತುಗಳು ಒದಗಿದಾಗ ಪ್ರಾಣದ ಹಂಗು ಲೆಕ್ಕಿಸದೆ ಸಾರ್ವಜನಿಕ ಪ್ರಾಣ, ಆಸ್ತಿಪಾಸ್ತಿ ರಕ್ಷಣಾ ಕಾರ್ಯದಲ್ಲಿ ಈ ಸ್ಪಂದನಾ ಪಡೆ ನಿರಂತರವಾಗಿ ಇರಲಿ ಎಂದು ಹಾರೈಸಿದರು. ವಾರದ ಎಲ್ಲಾ ದಿನವೂ 24 ಗಂಟೆಯೂ ಸಹಾಯಕ್ಕಾಗಿ ಧಾವಿಸಲು ಸ್ಪಂದನಾ ಪಡೆಗೆ 20 ಕೋಟಿ ರೂ. ವೆಚ್ಚದಲ್ಲಿ ಹೊಸ ವಾಹನಗಳನ್ನು ಖರೀದಿಸಲಾಗಿದೆ. ಬೆಂಗಳೂರಿನಲ್ಲಿ ಹೆಚ್ಚುವರಿಯಾಗಿ ಇನ್ನೂ ಮೂರು ರಾಜ್ಯ ವಿಪತ್ತು ಸ್ಪಂದನಾ ಪಡೆ ಕಂಪೆನಿಗಳನ್ನು ಸೃಷ್ಟಿಸಲು ಉದ್ದೇಶಿಸಿದ್ದು, ಮೊದಲ ಹಂತದಲ್ಲಿ ಶೋಧನಾ ಮತ್ತು ರಕ್ಷಣಾ ಉಪಕರಣ ಖರೀದಿಗೆ 9.65 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದೆ. ಕಠಿಣ ಪರಿಶ್ರಮ, ಬದ್ಧತೆ, ಮುಂದಾಲೋಚನೆಯಿಂದ ಕಾರ್ಯ ನಿರ್ವಹಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿ, ರಾಷ್ಟ್ರದಲ್ಲೇ ಅತ್ಯುತ್ತಮ ಮಾದರಿ ತುರ್ತು ಪಡೆಯಾಗಿ ಹೊರ ಹೊಮ್ಮಬೇಕೆಂದು ಸಚಿವರು ಆಶಿಸಿದರು.

ಇಲಾಖೆಗಳ ಸರ್ವತೋಮುಖ ಅಭಿವೃದ್ಧಿಗೆ ಎಲ್ಲಾ ರೀತಿಯ ಸೌಕರ್ಯ ಮತ್ತು ಅನುದಾನ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಅಗ್ನಿಶಾಮಕ ತುರ್ತು ಸೇವೆಗಳ ಪೋಲೀಸ್ ಮಹಾನಿರ್ದೇಶಕ ಡಾ.ಅಮರ ಕುಮಾರ್ ಪಾಂಡೆ, ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಾಲಿನೀ ಕೃಷ್ಣಮೂರ್ತಿ, ಎಡಿಜಿಪಿ(ಕಾನೂನು ಮತ್ತು ಸುವ್ಯವಸ್ಥೆ) ಪ್ರತಾಪ್‍ರೆಡ್ಡಿ, ವಿಧಾನಪರಿಷತ್ ಸದಸ್ಯ ಎಚ್.ಎಂ.ರಮೇಶ್‍ಗೌಡ ಮತ್ತಿತರರು ಉಪಸ್ಥಿತರಿದ್ದರು.

More News

You cannot copy content of this page