ಕಲಬುರಗಿ: ಖಾಸಗಿ ಬಸ್ ಮತ್ತು ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬಸ್ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರದಲ್ಲಿ ನಡೆದಿದೆ. ಘಟನೆಯಲ್ಲಿ ಏಳು ಪ್ರಯಾಣಿಕರು ಸಜೀವ ದಹನರಾಗಿದ್ದಾರೆ. ಹಾಗೆಯೇ ಹಲವರು ಗಾಯಗೊಂಡಿದ್ದಾರೆ.
ಅಪಘಾತದ ತೀವ್ರತೆಗೆ ಆರೆಂಜ್ ಡಿಲಕ್ಸ್ ಬಸ್ ಗೆ ಬೆಂಕಿ ಹತ್ತಿಕೊಂಡಿದೆ. ಹಲವರು ಬಸ್ನಿಂದ ಹೊರಗಡೆ ಬಂದು ಪ್ರಾಣಾಪಾಯದಿಂದ ಪಾರಾಗಿದ್ದು, ಏಳು ಜನರು ಬೆಂಕಿಯ ಕೆನ್ನಾಲಿಗೆಗೆ ಬಲಿಯಾಗಿದ್ದಾರೆ.
ತೆಲಂಗಾಣದ ಹೈದರಾಬಾದ್ ನಿಂದ ಗೋವಾಗೆ ಮೂರು ಕುಟುಂಬಗಳ 29 ಜನರು ಪ್ರವಾಸಕ್ಕೆ ತೆರಳುತ್ತಿದ್ದರು. ಗೋವಾದಿಂದ ಹಿಂದಕ್ಕೆ ಮರಳುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಅಗ್ನಿ ಅಗ್ನಿಶಾಮಕ ದಳ ಹಾಗೂ ಪೊಲೀಸರು ತೆರಳಿ, ಪರಿಹಾರ ಕಾರ್ಯ ಕೈಗೊಂಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ
ಕಲಬುರಗಿ ಹೊರವಲಯ ಕಮಲಾಪುರ ಬಳಿ ಇಂದು ಭೀಕರ ಅಪಘಾತ ನಡೆದು ಬಸ್ ನಲ್ಲಿದ್ದ 7 ಪ್ರಯಾಣಿಕರು ಸಜೀವ ದಹನರಾಗಿ ಹಲವರು ಗಾಯಗೊಂಡಿರುವ ವಿಷಯ ತಿಳಿದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಆಶಿಸಿರುವ ಮುಖ್ಯಮಂತ್ರಿಗಳು, ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
