ನವದೆಹಲಿ: ಸಾಂಪ್ರದಾಯಿಕ ಕಲೆ ಎಂದೇಳುವ ಕಂಬಳ ಹಾಗೂ ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ಕಾನೂನನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಈ ಮೂಲಕ ಸುಪ್ರೀಂ ನ ಹಿಂದಿನ ತೀರ್ಪನ್ನು ಪಂಚ ಪೀಠ ತಳ್ಳಿ ಹಾಕಿದೆ.
ತಮಿಳುನಾಡು, ಕರ್ನಾಟಕ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಜಲ್ಲಿಕಟ್ಟು, ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ ಅನುಮತಿ ನೀಡುವ ಕಾನೂನುಗಳ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ನ ಪಂಚ ಸಂವಿಧಾನಪೀಠ ವಜಾಗೊಳಿಸಿದೆ. ಅಲ್ಲದೇ ತಮ್ಮ ನಿರ್ಧಾರವು ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಕಂಬಳ ಹಾಗೂ ಗೂಳಿ ಓಟದ ಮೇಲಿನ ಕಾನೂನುಗಳಿಗೆ ಅನ್ವಯಿಸುತ್ತದೆ. ಈ ಕಾನೂನನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಈ ಪೀಠವು ಸೂಚಿಸಿದೆ.

ನ್ಯಾ. ಕೆ.ಎಂ ಜೋಸೆಫ್, ನ್ಯಾ. ಅಜಯ್ ರಸ್ತೋಗಿ, ನ್ಯಾ. ಅನಿರುದ್ಧ ಬೋಸ್, ನ್ಯಾ. ಹೃಷಿಕೇಶ್ ರಾಯ್ ಮತ್ತು ನ್ಯಾ. ಸಿ.ಟಿ ರವಿಕುಮಾರ್ ಅವರನ್ನೊಳಗೊಂಡ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ ತೀರ್ಪು ಪ್ರಕಟಿಸಿದೆ.
ಜಲ್ಲಿಕಟ್ಟು ತಮಿಳುನಾಡಿನ ಸಾಂಸ್ಕೃತಿಕ ಪರಂಪರೆಯ ಭಾಗವೆಂದು ಶಾಸಕಾಂಗವು ಘೋಷಿಸಿದಾಗ, ನ್ಯಾಯಾಂಗವು ವಿಭಿನ್ನ ದೃಷ್ಟಿಕೋನವನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸಂವಿಧಾನ ಪೀಠ ಹೇಳಿದೆ.
ತಮಿಳುನಾಡಿನಲ್ಲಿ ಗೂಳಿ ಪಳಗಿಸುವ ಕ್ರೀಡೆಗೆ ಅನುಮತಿ ನೀಡಿದ ರಾಜ್ಯ ಕಾನೂನನ್ನು ಪ್ರಶ್ನಿಸಿ ಪ್ರಾಣಿ ಹಕ್ಕುಗಳ ಸಂಸ್ಥೆ ಪೆಟಾ ಸುಪ್ರೀಂಗೆ ಅರ್ಜಿ ಸಲ್ಲಿಸಿತ್ತು. ಸುಪ್ರೀಂ ಕೋರ್ಟ್ನ ವೆಬ್ಸೈಟ್ನಲ್ಲಿ ಪ್ರಕಟವಾದ ಕಾರಣ ಪಟ್ಟಿಯ ಪ್ರಕಾರ, ನ್ಯಾಯಮೂರ್ತಿ ಅನಿರುದ್ಧ ಬೋಸ್ ಅವರು ಒಂದೇ ತೀರ್ಪು ಪ್ರಕಟಿಸಲಿದ್ದಾರೆ. ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ತೀರ್ಪು ಪ್ರಕಟಿಸಿದೆ.

2017ರಲ್ಲಿ ಪ್ರಾಣಿಗಳ ಮೇಲಿನ ಹಿಂಸೆ ತಡೆಯುವಂತೆ ಸಲ್ಲಿಸಿದ್ದ ಅರ್ಜಿಗಳಿಗೆ ಸಂಬಂಧಿಸಿದ ಗಣನೀಯ ಪ್ರಶ್ನೆಗಳನ್ನು ಎತ್ತಲಾಗಿತ್ತು. ಆದ ಕಾರಣ ದೊಡ್ಡ ಪೀಠದಿಂದ ಈ ವಿಚಾರವನ್ನು ತೀರ್ಮಾನಿಸಬೇಕಾಗಿದೆ ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ಹೇಳಿತ್ತು. ಅಲ್ಲದೆ ದೊಡ್ಡ ಪೀಠದಿಂದ ನಿರ್ಣಯಿಸಬೇಕಾದ ಐದು ಪ್ರಶ್ನೆಗಳನ್ನು ರೂಪಿಸಿತ್ತು.
ಜಲ್ಲಿಕಟ್ಟಿನಲ್ಲಿ ಯಾರೂ ಯಾವುದೇ ಆಯುಧವನ್ನು ಬಳಸುವುದಿಲ್ಲ. 2014ರ ತನ್ನ ತೀರ್ಪಿನಲ್ಲಿ, ಜಲ್ಲಿಕಟ್ಟು ಕಾರ್ಯಕ್ರಮಗಳು ಅಥವಾ ಎತ್ತಿನ ಗಾಡಿ ಓಟದ ಪ್ರದರ್ಶನಕ್ಕಾಗಿ ಎತ್ತುಗಳನ್ನು ಬಳಸಲಾಗುವುದಿಲ್ಲ ಎಂದು ಹೇಳಿದೆ. ಹಾಗು ದೇಶಾದ್ಯಂತ ಈ ಉದ್ದೇಶಗಳಿಗಾಗಿ ಎತ್ತುಗಳ ಬಳಕೆಯನ್ನು ನಿಷೇಧಿಸಿದೆ.
ಜಲ್ಲಿಕಟ್ಟು ಒಂದು ಗೂಳಿಯನ್ನು ಪಳಗಿಸುವ ಕ್ರೀಡೆಯಾಗಿದೆ. ತಮಿಳುನಾಡಿನಲ್ಲಿ ಪೊಂಗಲ್ ಸುಗ್ಗಿಯ ಹಬ್ಬದಲ್ಲಿ ಸಾಂಪ್ರದಾಯಿಕವಾಗಿ ಜಲ್ಲಿಕಟ್ಟು ಆಡಲಾಗುತ್ತದೆ. ಜಲ್ಲಿಕಟ್ಟು ಕ್ರೀಡೆಯನ್ನು ‘ಎರುತಝುವುತಲ್’ ಅಂತಲೂ ಕರೆಯುತ್ತಾರೆ.




