Electricity Bill Hike: ವಿದ್ಯುತ್ ಬಿಲ್ ಹೆಚ್ಚಳ: ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ವ್ಯಾಪಾರಸ್ಥರು

ಹುಬ್ಬಳ್ಳಿ: ವಿದ್ಯುತ್ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ವತಿಯಿಂದ ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿ ನಗರದಲ್ಲಿ ಪ್ರತಿಭಟನಾ ರ್ಯಾಲಿ ಮೂಲಕ ಚಿಮಣಿ ಹಿಡಿದು ವಿಭಿನ್ನವಾಗಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಗರದ ವಾಣಿಜ್ಯೋದ್ಯಮ ಸಂಸ್ಥೆಯ ಕಚೇರಿಯಿಂದ ಆರಂಭವಾದ ಬೃಹತ್ ಪ್ರತಿಭಟನೆ ತಹಶಿಲ್ದಾರ ಕಚೇರಿಯವರೆಗೆ ಸಾವಿರಾರು ಉದ್ಯಮಿಗಳು ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿ, ತಹಶಿಲ್ದಾರ ಕಚೇರಿಗೆ ಆಗಮಿಸಿ ತಹಶಿಲ್ದಾರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಅರ್ಪಿಸಲಾಯಿತು.

ಬಾರ್, ಹೊಟೇಲ್, ಸಣ್ಣ, ಮಧ್ಯಮ ಮತ್ತು ಬೃಹತ್ ಕೈಗಾರಿಕಾ ಸಂಸ್ಥೆಗಳಿಂದ ಬಂದ್ ಗೆ ಬೆಂಬಲ ವ್ಯಕ್ತಪಡಿಸಿ, ರಾಜ್ಯ ಸರ್ಕಾರ ಈ ಹಿಂದೆ ನಾವು ನೀಡಿರುವ ಗಡುವು ಮೀರಿದ ಹಿನ್ನಲೆಯಲ್ಲಿ ನಾವು ರಾಜ್ಯಾದ್ಯಂತ ಬಂದ್ ಗೆ ನೀಡಲಾಗಿದೆ.

ಕೈಗಾರಿಕೋದ್ಯಮಗಳು ವಿದ್ಯುತ್ ದರ ಏರಿಕೆಯಿಂದ ನಲುಗುವಂತಾಗಿದ್ದು, ವಿದ್ಯುತ್ ದರ ಇಳಿಕೆ ಮಾಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ವಿನಯ ಜವಳಿ, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಅಗಡಿ ಸೇರಿದಂತೆ ನೂರಾರು ಉದ್ಯಮಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

More News