ಸಿಎಂ ಸಿದ್ದರಾಮಯ್ಯ ರ ನೋ ಹಿಜಾಬ್ ಹೇಳಿಕೆ ರಾಜಕೀಯ ವಲಯದಲ್ಲಿ ವಾಗ್ಯುದ್ದಕ್ಕೆ ಕಾರಣವಾಗಿದೆ. ಈ ಕುರಿತು ವಾಗ್ದಾಳಿ ನಡೆಸಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಹಿಜಾಬ್ ಹೇಳಿಕೆ ಭವಿಷ್ಯ ದಲ್ಲಿ ದೊಡ್ಡ ಮಟ್ಟದಲ್ಲಿ ಪರಿಣಾಮ ಬೀರಲಿದೆ. ಮಕ್ಕಳಲ್ಲಿ ತಾವು ಯಾವ ಧರ್ಮಕ್ಕೆ ಸೇರಿದವರು ಎಂದು ಬೀಜ ಬಿತ್ತುವ ಪ್ರಯತ್ನ ಇದಾಗಿದೆ ಎಂದು ಗುಡುಗಿದ್ದಾರೆ.
ಈ ಕುರಿತು ಆರ್ ಟಿ ನಗರದ ತಮ್ಮ ನಿವಾಸದ ಬಳಿ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಎಲ್ಲೆಡೆ ಹಿಜಾಬ್ ನಿಷೇಧ ಆಗಿಯೇ ಇಲ್ಲ. ಎಲ್ಲಿ ಡ್ರೆಸ್ ಕೋಡ್ ಇದೆ ಅಲ್ಲಿ ಮಾತ್ರ ನಿಷೇಧ ಇದೆ. ಮಹಿಳೆಯರು ಎಲ್ಲಿ ಬೇಕು ಅಲ್ಲಿ ಹಾಕಿಕೊಂಡು ಓಡಾಡುತ್ತಿದ್ದಾರೆ. ಹಿಜಾಬ್ ನಿಷೇಧ ಆಗಿಯೇ ಇಲ್ಲ. ರಾಜ್ಯದಲ್ಲಿ ಯಾವುದೇ ಅಭಿವೃದ್ದಿ ಮಾಡದ ಸರ್ಕಾರ, ಹಿಜಾಬ್ ನಿಷೇಧದ ಮೂಲಕ ಶಾಲಾ ಮಕ್ಕಳಲ್ಲಿ ಒಡಕುಂಟು ಮಾಡುವ ಉದ್ದೇಶ ಹೊಂದಿದೆ ಎಂದು ದೂರಿದರು.

1984 ರಲ್ಲಿ ಸಮಗ್ರ ಶಿಕ್ಷಣ ಕಾಯ್ದೆ ಅಡಿ ಡ್ರೆಸ್ ಕೊಡ್ ಮಾಡಲಾಗಿದ್ದು, ಅದನ್ನು ಹಿಂದೆ ಪಡೆಯುವ ಬಗ್ಗೆ ಮಾತನಾಡಿದ್ದಾರೆ. ಈಗಾಗಲೇ ಕೊರ್ಟ್ ನಲ್ಲಿ ಪ್ರಕರಣ ಇದೆ. ರಾಜಕೀಯ ಕಾರಣಕ್ಕೆ ಹಿಜಾಬ್ ಪ್ರಸ್ತಾಪ ಮಾಡಿದ್ದಾರೆ. ಇದನ್ನು ಖಂಡಿಸುತ್ತೇನೆ. ಬೆಳಗಾವಿ ಅಧಿವೇಶನ ನಡೆಯುತ್ತಿರುವಾಗ ಹುಬ್ಬಳ್ಳಿಯಲ್ಲಿ ಅಲ್ಪ ಸಂಖ್ಯಾತರಿಗೆ 10 ಸಾವಿರ ಕೋಟಿ ಕೊಡುವುದಾಗಿ ಘೋಷಣೆ ಮಾಡಿದರು.ಅಭಿವೃದ್ಧಿ ಗೆ ಇವರ ಬಳಿ ಹಣ ಇಲ್ಲ. ಅವರ ಪಕ್ಷದ ಶಾಸಕರೆ ಬಹಿರಂಗವಾಗಿ ಹೇಳಿದ್ದಾರೆ. ಪತ್ರ ಕೂಡ ಬರೆದಿದ್ದಾರೆ. ರಾಜ್ಯದಲ್ಲಿ ಬರ ಇದೆ. ಮಹಿಳೆಯರಿಗೆ ರಕ್ಷಣೆ ಇಲ್ಲ. ಮಕ್ಕಳಿಂದ ಶೌಚಾಲಯ ತೊಳೆಸುವ ಮಟ್ಟಕ್ಕೆ ಇಳಿದಿದೆ. ಇದೆಲ್ಲ ಮರೆತು ಜನರ ದಾರಿ ತಪ್ಪಿಸಲು ಈ ರೀತಿಯ ಹೇಳಿಕೆ ಕೊಡುತ್ತಿದ್ದಾರೆ ಎಂದು ಆರೋಪಿಸಿದರು.
ಐಟಿ ರೇಡ್ ಆಗಿ ಕಾಂಟ್ರಾಕ್ಟರ್ ಬಳಿ ಕೋಟ್ಯಂತರ ರೂ ಹಣ ಸಿಕ್ಕಿತು ಆಗಲೂ ದಾರಿ ತಪ್ಪಿಸುವ ಕೆಲಸ ಮಾಡಿದರು. ಯಾವುದೇ ಅಭಿವೃದ್ದಿ ಮಾಡದ ಸರ್ಕಾರ ರಾಜ್ಯದಲ್ಲಿ ಬಂದಿದೆ. ಶಾಲಾ ಮಕ್ಕಳಲ್ಲಿ ಒಡಕುಂಟು ಮಾಡುವ ಉದ್ದೇಶ ಇದರಲ್ಲಿ ಇದೆ. ಭವಿಷ್ಯದಲ್ಲಿ ಇದು ದೊಡ್ಡ ಮಟ್ಟದ ಪರಿಣಾಮ ಬೀರುತ್ತದೆ. ಮಕ್ಕಳಲ್ಲಿ ತಾವು ಯಾವ ಧರ್ಮಕ್ಕೆ ಸೇರಿದ್ದೇವೆ ಎಂದು ಬೀಜ ಬಿತ್ತುವ ಪ್ರಯತ್ನ ನಡೆಯುತ್ತಿದೆ. ಹಿಜಾಬ್ ವಿಚಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇರಾಕ್ ಇರಾನ್ ನಲ್ಲಿ ಮಹಿಳೆಯರು ಸ್ವಾತಂತ್ರ್ಯ ಕ್ಕಾಗಿ ಹೋರಾಟ ಮಾಡುತ್ತಾರೆ. ಸುಪ್ರಿಂ ಕೋರ್ಟ್ ನಲ್ಲಿ ಪ್ರಕರಣ ಇದ್ದಾಗ ಈ ಬಗ್ಗೆ ಹೇಳಿಕೆ ನೀಡುವ ಅಗತ್ಯ ಏನಿತ್ತು. ಕೋರ್ಟ್ ಈ ಬಗ್ಗೆ ಗಮನ ಹರಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಜಾತಿ ಗಣತಿ ಬಿಡುಗಡೆ ಮಾಡುವ ವಿಚಾರದ ಕುರಿತು ಟೀಕಿಸಿದ ಅವರು, ಹಿಂದುಳಿದ ವರ್ಗದ ಆಯೋಗ ಮಾಡಿರುವುದು ಜಾತಿ ಗಣತಿಯೇ ಅಲ್ಲ. ಎಲ್ಲ ಸಮುದಾಯಗಳ ಶೈಕ್ಷಣಿಕ ಮತ್ತು ಆರ್ಥಿಕ ಪರಿಸ್ಥಿತಿ ಹೇಗಿದೆ ಅಂತ ಅಧ್ಯಯನ ಮಾಡಿದೆ. ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ಮಾಡುವ ಅಧಿಕಾರ ಇಲ್ಲ. ಬೇರೆ ರಾಜ್ಯಗಳ ಜಾತಿಗಣತಿಗಳ ಬಗ್ಗೆಯೂ ಸುಪ್ರೀಂ ಕೋರ್ಟ್ ನಲ್ಲಿ ಚರ್ಚೆ ನಡೆಯುತ್ತಿದೆ. ಈಗಿರುವ ಹಿಂದುಳಿದ ವರ್ಗದ ಅಧ್ಯಕ್ಷರು ಈಗಾಗಲೇ ಸಿದ್ದವಾಗಿರುವ ವರದಿಯನ್ನು ಏಕೆ ಇಟ್ಟುಕೊಂಡಿದ್ದಾರೆ. ನಾವೂ ಸಾಮಾಜಿಕ ನ್ಯಾಯದ ಪರವಾಗಿದ್ದೇವೆ. ಸಾಮಾಜಿಕ ನ್ಯಾಯ ಯಾವುದೇ ಒಂದು ಪಕ್ಷದ ಸ್ವತ್ತಲ್ಲ. ಅವರಿಗೆ ಎಲ್ಲರಿಗೂ ನ್ಯಾಯ ಕೊಡಿಸಬೇಕೆಂದು ಇದ್ದರೆ ಅಧಿಕೃತ ಜಾತಿ ಗಣತಿಮಾಡಲಿ. ನಾವು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಹಿಂದುಳಿದ ವರ್ಗಗಳ ಅನೇಕ ಸಮುದಾಯಗಳಿಗೆ ನ್ಯಾಯ ಕೊಡಿಸಲು ಪ್ರಯತ್ನ ಮಾಡಿದ್ದೇವೆ. ಈ ವರದಿ ವೈಜ್ಞಾನಿಕ ವಾಗಿಲ್ಲ ಎನ್ನುವ ಮಾತಿದೆ. ಈ ವರದಿ ಬರಲಿ ಏನು ಲೋಪ ಇದೆ ನೊಡೋಣ ಎಂದರು.




