ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಆಕ್ಷೇಪಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದೇಶದ ಕೋಟ್ಯಂತರ ಜನರ ರಾಮಮಂದಿರ ನಿರ್ಮಾಣದ ಸಂಕಲ್ಪವನ್ನು ಪ್ರಧಾನಿ ನರೇಂದ್ರ ಮೋದಿಜೀ ಅವರು ಈಡೇರಿಸಿದ್ದಾರೆ. ಒಂದೆಡೆ ರಾಮಮಂದಿರ ಉದ್ಘಾಟನೆಗೆ ದಿನ ನಿಗದಿಯಾಗಿದೆ. ಇನ್ನೊಂದು ಕಡೆ ಕಾಂಗ್ರೆಸ್ ಸರಕಾರವು ಸುಮಾರು 31 ವರ್ಷಗಳಷ್ಟು ಹಳೆಯ ಕೇಸುಗಳನ್ನು ತೆಗೆದು ಹಿಂದೂಗಳನ್ನು ಬಂಧಿಸುತ್ತಿದೆ. ಇದು ಹಿಂದೂ ವಿರೋಧಿ ಸರಕಾರ ಎಂದು ಟೀಕಿಸಿದರು.

ಶ್ರೀರಾಮಚಂದ್ರನೇ ಕಾಲ್ಪನಿಕ ಎನ್ನುವ ಕಾಂಗ್ರೆಸ್ಸಿಗರು ಅಯೋಧ್ಯೆಯಲ್ಲಿ ಮಹರ್ಷಿ ವಾಲ್ಮೀಕಿ ದೇವಾಲಯದ ಮಾತನಾಡುತ್ತಾರೆ. ಶ್ರೀರಾಮಚಂದ್ರನೇ ಕಾಲ್ಪನಿಕ ಎಂದಾದರೆ ಮಹರ್ಷಿ ವಾಲ್ಮೀಕಿ ಕುರಿತು ಮಾತನಾಡಲು ನಿಮಗೇನು ಹಕ್ಕಿದೆ ಎಂದು ಪ್ರಶ್ನೆಯನ್ನು ಮುಂದಿಟ್ಟರು. ಮೋದಿಜೀ ಅವರು ಅಯೋಧ್ಯೆ ವಿಮಾನನಿಲ್ದಾಣವನ್ನು ಮಹರ್ಷಿ ವಾಲ್ಮೀಕಿ ವಿಮಾನನಿಲ್ದಾಣ ಎಂದು ನಾಮಕರಣ ಮಾಡಿದ್ದಾರೆ ಎಂದು ತಿಳಿಸಿದರು.
ಶ್ರೀರಾಮಮಂದಿರ ನಿರ್ಮಾಣದ ಕುರಿತು ಸಂತಸ ಸೂಚಿಸಿ ದೇಶದ 125 ಕೋಟಿ ಜನರು ಕುಣಿದು ಕುಪ್ಪಳಿಸುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಈ ಸರಕಾರವು ದ್ವೇóಷ ರಾಜಕಾರಣ ಮಾಡುತ್ತಿದೆ. ಅದನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದರು.
ಇದರ ವಿರುದ್ಧ ದೊಡ್ಡ ಮಟ್ಟದ ಹೋರಾಟ ರೂಪಿಸುವುದಾಗಿ ಎಚ್ಚರಿಸಿದರು. ದ್ವೇಷ ರಾಜಕಾರಣದ ಮೂಲಕ, ಸೇಡಿನ ರಾಜಕಾರಣದ ಮೂಲಕ ಕಾಂಗ್ರೆಸ್ ಅಂತ್ಯಕಾಲ ಆರಂಭವಾಗಿದೆ ಎಂದು ಅವರು ನುಡಿದರು.