ನವದೆಹಲಿ : ಇಡೀ ದೇಶವೇ ಬದಲಾವಣೆಯನ್ನು ಬಯಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ನವದೆಹಲಿಯಲ್ಲಿ ಇಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ವಿಚಾರ ತಿಳಿಸಿದ ಅವರು, ನಮ್ಮ ಪ್ರಣಾಳಿಕೆ ವಿವಿಧ ರಾಜ್ಯಗಳಲ್ಲಿ ವ್ಯಾಪಕ ಪ್ರಚಾರ ಗಿಟ್ಟಿಸುತ್ತಿದೆ ಎಂಬುದನ್ನು ಖಾತ್ರಿಪಡಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.
ನಮ್ಮ ಕಾಂಗ್ರೆಸ್ ಪಕ್ಷದ ಭರವಸೆಗಳು ದೇಶದ ಪ್ರತಿ ಹಳ್ಳಿಯಲ್ಲಿ ಮನೆಗೂ ತಲುಪುವಂತೆ ನೋಡಿಕೊಳ್ಳಬೇಕು ಎಂದು ಪಕ್ಷದ ಮುಖಂಡರಿಗೆ ಮತ್ತು ಕಾರ್ಯಕರ್ತರಿಗೆ ಕರೆ ನೀಡಿದರು.
ಇಂದು ನಡೆದ ಸಿಡಬ್ಲ್ಯೂಸಿ ಸಭೆಯಲ್ಲಿ ಲೋಕಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಗೆ ಅಂತಿಮ ರೂಪ ನೀಡಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಕೆ ಸಿ ವೇಣುಗೋಪಾಲ್, ಜೈರಾಮ್ ರಮೇಶ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಅನುಮೋದನೆ ನೀಡಿದ ಬಳಿಕ ದಿನಾಂಕ ನಿಗಧಿಪಡಿಸಿ ಘೋಷಣೆ ಮಾಡಲಾಗುವುದು ಎಂದರು.
ಚಿದಂಬರಂ ಅವರು ಪಕ್ಷದ ಪ್ರಣಾಳಿಕೆ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಪಕ್ಷವು ಇದುವರೆಗೂ ಐದು ನ್ಯಾಯಗಳೊಂದಿಗೆ ಚುನಾವಣೆ ಎದುರಿಸುತ್ತಿದೆ. ಭಾಗಿದಾರಿ ನ್ಯಾಯ, ಕಿಸಾನ್ ನ್ಯಾಯ, ನಾರಿ ನ್ಯಾಯ, ಶ್ರಮಿಕ್ ನ್ಯಾಯ ಮತ್ತು ಯುವ ನ್ಯಾಯಗಳಾಗಿವೆ.
ಇದೇ ಸಂದರ್ಭದಲ್ಲಿ ಖರ್ಗೆ ಅವರು ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಶ್ಲಾಘಿಸಿದರು. ಈ ಯಾತ್ರೆಯ ಮೂಲಕ ನಜರ ನಿಜವಾದ ಸಮಸ್ಯೆಯತ್ತ ದೇಶದ ಗಮನವನ್ನು ಸೆಳೆಯಲು ಕಾಂಗ್ರೆಸ್ ಗೆ ಸಾಧ್ಯವಾಗಿದೆ ಎಂದರು.
ಇದು ಕೇವಲ ರಾಜಕೀಯ ಯಾತ್ರೆಯಾಗಿರಲಿಲ್ಲ, ಆದರೆ, ನಮ್ಮ ರಾಜಕೀಯ ಇತಿಹಾಸದಲ್ಲಿ ಅತೀ ದೊಡ್ಡ ಸಂಪರ್ಕಯಾತ್ರೆಯಾಗಿತ್ತು ಎಂದರು.