ಬೆಂಗಳೂರು : ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕಿತ ಆರೋಪಿ ತಮಿಳುನಾಡಿನವನು ಎಂದು ಹೇಳಿಕೆ ನೀಡಿದ ಮಾರನೇ ದಿನ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮಿಳುನಾಡಿನ ಜನತೆಯಲ್ಲಿ ಕ್ಷಮೆಯಾಚಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ತಮಿಳುನಾಡಿನ ಜನತೆಯ ಕ್ಷಮೆ ಕೋರಿರುವ ಶೋಭಾ, ನನ್ನ ಮಾತುಗಳು ಪ್ರಕರಣದ ಬಗ್ಗೆ ಹೆಚ್ಚಿನ ಬೆಳಕು ಚೆಲ್ಲುವ ಉದ್ದೇಶದಿಂದ ಆಡಿದ್ದೇನೆ ಹೊರತು ತಮಿಳುನಾಡಿನ ಜನತೆಯ ಮೇಲೆ ಾರೋಪ ಹೊರಿಸುವ ಉದ್ದೇಶ ಇರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನನ್ನ ಹೇಳಿಕೆಗಳು ಅನೇಕರಿಗೆ ನೋವು ತಂದಿರುವುದರಿಂದ ನಾನು ಕ್ಷಮೆಯಾಚಿಸುತ್ತೇನೆ ಎಂದು ಬರೆದುಕೊಂಡಿರುವ ಅವರು ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದ ಆರೋಪಿ ಕೃಷ್ಣಗಿರಿ ಅರಣ್ಯದಲ್ಲಿ ತರಬೇತಿ ಪಡೆದವರ ಬಗ್ಗೆ ಹೇಳಿದ್ದಾಗಿದೆ ಎಂದು ತಿಳಿಸಿದ್ದಾರೆ.
ಈ ಸಂಬಂಧ ಅನೇಕರಿಗೆ ಬೇಸರವಾಗಿರುವುದರಿಂದ ನಾನು ನನ್ನ ಮಾತುಗಳನ್ನು ಹಿಂದಕ್ಕೆ ಪಡೆಯುತ್ತಿದ್ದೇನೆ ಎಂದು ಹೇಳಿದ್ದಾರೆ. ನಿನ್ನೆ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಅವರು ತಮಿಳುನಾಡಿನಿಂದ ಬಂದ ವ್ಯಕ್ತಿ ರಾಮೇಶ್ವರ ಕೆಫೆಯಲ್ಲಿ ಬಾಂಬ್ ಇಟ್ಟಿದ್ದ, ಕೇರಳದಿಂದ ಬಂದ ವ್ಯಕ್ತಿಯೊಬ್ಬ ವಿದ್ಯಾರ್ಥಿಗಳ ಮೇಲೆ ಆ್ಯಸಿಡ್ ಎರಚಿದ್ದ, ದೆಹಲಿಯಿಂದ ಬಂದ ವ್ಯಕ್ತಿಯೊಬ್ಬ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಎಂದು ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದರು.
ಸಿಎಂ ಸ್ಟ್ಯಾಲಿನ್ ಕಿಡಿ
ಶೋಭಾ ಕರಂದ್ಲಾಜೆ ಅವರ ಹೇಳಿಕೆಗೆ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟ್ಯಾಲಿನ್ ಆಕ್ರೋಶ ವ್ಯಕ್ತಪಡಿಸಿದ್ದು, ಇದೊಂದು ಬೇಜವಾಬ್ದಾರಿ ಹೇಳಿಕೆ ಎಂದು ಕಿಡಿಕಾರಿದ್ದಾರೆ.
ಇಂತಹ ಹೇಳಿಕೆ ನೀಡಲು ಅವರಿಗೆ ಅಧಿಕಾರ ಇಲ್ಲ, ತಮಿಳರು ಮತ್ತು ಕನ್ನಡಿಗರು ಬಿಜೆಪಿಯ ಈ ವಿಭಜನೆಯ ಮಾತುಗಳನ್ನು ತಿರಸ್ಕರಿಸುತ್ತಾರೆ. ಶಾಂತಿ ಸೌಹಾರ್ದತೆ ಮತ್ತು ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ಉಂಟು ಮಾಡಿರುವ ಶೋಭಾ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಪ್ರಧಾನಿಯಿಂದ ಹಿಡಿದು ಕಾರ್ಯಕರ್ತರವರೆಗೆ ಬಿಜೆಪಿಯ ಎಲ್ಲರೂ ಈ ಕೊಳಕು ವಿಭಜಕ ರಾಜಕಾರಣ ಮಾಡುವುದನ್ನು ನಿಲ್ಲಿಸಬೇಕು. ಚುನಾವಣಾ ಆಯೋಗವು ಈ ದ್ವೇಷದ ಭಾಷಣವನ್ನು ಗಮನಿಸಿ, ತಕ್ಷಣವೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.