Search

G PARAMESHWAR ON PRAJWAL REVANNA CASE: ತ್ವರಿತಗತಿಯಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ: ಗೃಹ ಸಚಿವ ಪರಮೇಶ್ವರ

ಬೆಂಗಳೂರು (ಏಪ್ರಿಲ್ 29):- ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ಎಸ್ಐಟಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು‌.

ಸದಾಶಿವನಗರದ ತಮ್ಮ ನಿವಾಸದ ಬಳಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದ ತಂಡ ಪ್ರಕರಣದ ತನಿಖೆಯನ್ನು ಕೈಗೊಂಡಿದೆ. ಪೆನ್‌ಡ್ರೈವ್‌ಗಳನ್ನು ವಶಪಡಿಸಿಕೊಂಡು ವೈಜ್ಞಾನಿಕ ವರದಿಗಾಗಿ ಎಫ್‌ಎಸ್‌ಎಲ್‌ಗೆ ರವಾನಿಸಲಿದ್ದಾರೆ‌. ಸಾಕ್ಷಿಗಳ ಹೇಳಿಕೆಯನ್ನು ಪಡೆಯಲಿದ್ದಾರೆ ಎಂದರು.

ಎಸ್ಐಟಿ ತಂಡವು ಮುಕ್ತವಾಗಿ ಕೆಲಸ ಮಾಡಲಿದೆ. ಪ್ರಕರಣದ ವರದಿ ಸಲ್ಲಿಸಲು ಯಾವುದೇ ರೀತಿಯ ಸಮಯ ನಿಗಧಿಪಡಿಸಿಲ್ಲ. ತನಿಖೆ ವಿಳಂಬವಾಗಬಾರದು ಎಂಬ ದೃಷ್ಟಿಯಿಂದ ತ್ವರಿತಗತಿಯಲ್ಲಿ ತನಿಖೆ ನಡೆಸುವಂತೆ ಮೌಖಿಕವಾಗಿ ತಿಳಿಸಲಾಗಿದೆ. ವರದಿಯನ್ನು ನಾಳೆಯೇ ಕೊಡಿ, ನಾಡಿದ್ದು ಕೊಡಿ ಎಂದು ದಿನ ನಿಗಧಿಪಡಿಸಿಲ್ಲ ಎಂದು ಸ್ಪಷ್ಟಪಡಿಸಿದರು.

ಮಹಿಳಾ ಆಯೋಗವು ಬರೆದ ಪತ್ರದ ಆಧಾರದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ರೀತಿಯ ದೂರುಗಳನ್ನು ಎಸ್‌ಐಟಿ ಪಡೆಯಲಿದೆ. ಸಂತ್ರಸ್ತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಎಸ್‌ಐಟಿ ಕೆಲಸ ಮಾಡಲಿದೆ. ಸಂತ್ರಸ್ತರಿಗೆ ಜೀವ ಭಯವಿದ್ದರೆ ಪೊಲೀಸ್ ಭದ್ರತೆ ನೀಡಲಾಗುವುದು ಎಂದು ತಿಳಿಸಿದರು‌

ಸಂಸದ ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಸಂತಾಪ:-
ದಲಿತ ಸಮುದಾಯದ ಹಿರಿಯ ನಾಯಕರಾಗಿದ್ದ ವಿ.ಶ್ರೀನಿವಾಸ್ ಪ್ರಸಾದ್ ಅವರ ಅಗಲಿಕೆ ರಾಜ್ಯಕ್ಕೆ ತುಂಬಲಾರದ ನಷ್ಟ‌. ಯುವಕರಾಗಿದ್ದಾಗಲೇ ರಾಜಕೀಯ ಜೀವನ ಪ್ರಾರಂಭಿಸಿದ ಅವರು, ರಾಜ್ಯದ ಜನರ ಹಿತಕಾಯುವ ನಿಟ್ಟಿನಲ್ಲಿ ಯಶಸ್ವಿಯಾಗಿ ಕೆಲಸ ಮಾಡಿದವರು‌. ಅವರಿಗೆ ಸಂತಾಪಗಳು.

ಆರು ಬಾರಿ ಸಂಸದರಾಗಿ, ಕೇಂದ್ರದ ಸಚಿವರಾಗಿ, ರಾಜ್ಯ ಸಚಿವರಾಗಿದ್ದ ವೇಳೆ ದಲಿತರ ಧ್ವನಿಯಾಗಿ ಅನೇಕ ವಿಚಾರಗಳನ್ನು ಸದನಗಳಲ್ಲಿ ಪ್ರಸ್ತಾಪಿಸಿದ್ದರು. ದಲಿತರಿಗೆ‌ ಆದ ಅನ್ಯಾಯವನ್ನು ಖಂಡಿಸುತ್ತಿದ್ದರು. ನೇರವಂತಿಕೆಯ ನಾಯಕನನ್ನು ಕಳೆದುಕೊಂಡಿದ್ದೇವೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಕುಟುಂಬವರ್ಗಕ್ಕೆ, ಅಭಿಮಾನಿಗಳಿಗೆ ದುಃಖಭರಿಸುವ ಶಕ್ತಿ ದೇವರು ನೀಡಲಿ ಎಂದು ತಿಳಿಸಿದರು.

More News

You cannot copy content of this page