ನವದೆಹಲಿ: ದೇಶದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ ಮುಗಿದ ಕೂಡಲೇ ಬಿಜೆಪಿ ತನ್ನ ಕಾರ್ಯತಂತ್ರ ಬದಲಾಯಿಸಿದೆ. ಬಿಜೆಪಿಯ ಸ್ಟಾರ್ ಪ್ರಚಾರಕರಾಗಿರುವ ಪ್ರಧಾನಿ ಮೋದಿ ಮತ್ತು ಅಮಿತ್ ಷಾ ತಮ್ಮ ಭಾಷಣದಲ್ಲಿ ಪ್ರಮುಖವಾಗಿ ಕರ್ನಾಟಕದ ಮೀಸಲಾತಿ ಬಗ್ಗೆ ಪ್ರಸ್ತಾಪಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕಳೆದ ಎಂಟು ದಿನಗಳಲ್ಲಿ ಸತತವಾಗಿ ಕರ್ನಾಟಕದ ಮೀಸಲಾತಿ ಕುರಿತಂತೆ ಸಾರ್ವಜನಿಕ ಸಭೆಗಳಲ್ಲಿ ನಿರಂತರವಾಗಿ ಪ್ರಸ್ತಾಪಿಸುತ್ತಿದ್ದಾರೆ
ಮುಸ್ಲಿಂ ಮೀಸಲಾತಿಯನ್ನು ಟಾರ್ಗೆಟ್ ಮಾಡಿ ಪ್ರಧಾನಿ ನಿರಂತರವಾಗಿ ವಾಗ್ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಸಿಎಂ ಸಿದ್ದರಾಮಯ್ಯ ಕೂಡ ಇದಕ್ಕೆ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲ ತಾಣಗಳು ಸೇರಿದಂತೆ ಲಭ್ಯ ಇರುವ ಎಲ್ಲ ವೇದಿಕೆಗಳ ಮೂಲಕ ರಾಜ್ಯ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.
ರಾಜ್ಯ ಸರ್ಕಾರದ ಸ್ಪಷ್ಟೀಕರಣದ ಬಳಿಕವೂ ಪ್ರಧಾನಿ ಮೋದಿ ತಮ್ಮ ವಾಗ್ದಾಳಿ ಮುಂದುವರಿಸಿದ್ದಾರೆ. ಹಿಂದುಳಿದವರ ಮೀಸಲಾತಿ ಕಸಿದುಕೊಂಡು ಅದನ್ನು ಅಲ್ಪಸಂಖ್ಯಾತರಿಗೆ ಹಂಚುವ ಕೆಲಸ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮಾಡಿದೆ. ಕಾಂಗ್ರೆಸ್ ಇದೇ ನೀತಿಯನ್ನು ದೇಶಾದ್ಯಂತ ವಿಸ್ತರಿಸಲು ಹೊರಟಿದೆ ಎಂದು ಪ್ರಧಾನಿ ಮೋದಿ ಗಂಭೀರ ಆರೋಪ ಮಾಡಿದ್ದಾರೆ.
ಎರಡನೆ ಹಂತದ ಪ್ರಚಾರ ಸಭೆಯಲ್ಲಿ ಮೋದಿ ಈ ರೀತಿ ಪದೇ ಪದೇ ಮೀಸಲಾತಿ ಅಸ್ತ್ರ ಬಳಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿ ತನ್ನ ರಾಜಕೀಯ ತಂತ್ರದ ಭಾಗವಾಗಿ ಈ ರೀತಿ ಪ್ರಚಾರ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ.
ಉತ್ತರ ಭಾರತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಹಿಂದುಳಿದವರ ಮತಗಳ ಮೇಲೆ ಕಣ್ಣಿಟ್ಟು ಬಿಜೆಪಿ ತನ್ನ ಕಾರ್ಯತಂತ್ರ ಬದಲಾಯಿಸಿದೆ. ಉತ್ತರ ಕರ್ನಾಟಕದಲ್ಲಿ ನಡೆದ ಪ್ರಚಾರ ಸಭೆಗಳಲ್ಲಿ ಕೂಡ ಮೋದಿ ಮೀಸಲಾತಿ ದಾಳ ಉರುಳಿಸಿದ್ದಾರೆ. ರಾಜ್ಯ ಸರ್ಕಾರ ಹಿಂದುಳಿದ ಜಾತಿಗಳಿಗೆ ಅನ್ಯಾಯಮಾಡುತ್ತಿದೆ ಎಂದು ಟೀಕಿಸಿದ್ದಾರೆ
ಹಿಂದುಳಿದ ಜಾತಿಗಳ ಮೀಸಲಾತಿ ಕಸಿದುಕೊಳ್ಳಲು ನಾನು ಅವಕಾಶ ನೀಡುವುದೇ ಇಲ್ಲ ಎಂದು ಮೋದಿ ಗುಡುಗಿದ್ದಾರೆ.
ರಾಜ್ಯದ ಮೀಸಲಾತಿ ನೀತಿಯನ್ನು ಚುನಾವಣಾ ಪ್ರಚಾರದಲ್ಲಿ ಪ್ರಸ್ತಾಪಿಸುವ ಮೂಲಕ ಬಂಪರ್ ರಾಜಕೀಯ ಬೆಳೆಯ ನಿರೀಕ್ಷೆಯಲ್ಲಿದೆ ಕಮಲ ಪಡೆ.
ಬಿಜೆಪಿಯ ಈ ಪ್ರಯತ್ನ ಎಷ್ಟರ ಮಟ್ಟಿಗೆ ಫಲ ನೀಡಲಿದೆ ಎಂಬುದು ಜೂನ್ 4ರಂದು ಗೊತ್ತಾಗಲಿದೆ. ಅಲ್ಲಿಯವರೆಗೆ ಕಾಯಬೇಕಾಗಿದೆ