ಬೆಂಗಳೂರು, ಫೆಬ್ರವರಿ 12: ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಅದರ ಪರಿಣಾಮಗಳೇನು ಹಾಗೂ ರಾಜ್ಯದ ಸ್ಥಿತಿಗತಿಯ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಆರ್ ಟಿ ನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಇತರೆ ಹಿಂದುಳಿದ ವರ್ಗಗಳಿಗೆ ನೀಡಲಾಗಿರುವ ಮೀಸಲಾತಿಯನ್ನು ಉಳಿಸಿಕೊಂಡು ಚುನಾವಣೆಯನ್ನು ಯಾವ ರೀತಿ ಮಾಡಬೇಕೆಂದು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಹಲವಾರು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಉದ್ದೇಶದಿಂದ ನಾನು ಇಂದು ಸ್ವಕ್ಷೇತ್ರಕ್ಕೆ ಹೋಗುತ್ತಿದ್ದೇನೆ ಎಂದು ತಿಳಿಸಿದ ಅವರು, ಕೆಲ ಸ್ನೇಹಿತರನ್ನ ಭೇಟಿ ಮಾಡಬೇಕಾಗಿದೆ, ಹಾಗಾಗಿ ಇಂದು ಶಿಗ್ಗಾವಿಗೆ ಹೋಗುತ್ತಿದ್ದೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಪಿಯುಸಿ ಕಾಲೇಜು ಆರಂಭ ವಿಚಾರ
ಸೋಮವಾರದಂದು ನ್ಯಾಯಾಲಯದಲ್ಲಿ ಏನು ಆಗಲಿದೆ ಎಂದು ನೋಡಿಕೊಂಡು ಶಾಲೆಗಳ ಆರಂಭದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ ಮುಖ್ಯಮಂತ್ರಿ, ಸಂಬಂಧಿಸಿದ ಸಚಿವರು ಈ ಬಗ್ಗೆ ಚರ್ಚಿಸಿ ಕ್ರಮಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಹೆಲ್ತ್ ಇನ್ಸ್ ಪೆಕ್ಟರ್ ಹುದ್ದೆ ಭರ್ತಿ ಮಾಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಪತ್ರ ನೀಡಲು ಸಿಎಂ ನಿವಾಸ ಬಳಿ ಬಂದಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ತಡೆದರು.
ಡಿಪ್ಲೊಮಾ ಇನ್ ಹೆಲ್ತ್ ಇನ್ಸ್ ಪೆಕ್ಟರ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ಬೆಳಗ್ಗೆಯಿಂದ ಸಿಎಂಗಾಗಿ ಅವರನ ನಿವಾಸದ ಮುಂದೆ ಕಾದು ಕುಳಿತಿದ್ದರು. ನಂತರ ಸಿಎಂ ಅವರು ಮನೆಯಿಂದ ಹೊರಗೆ ಬಂದಾಗ ಅವರಿಗೆ ಮನವಿ ಪತ್ರ ನೀಡಲು ಪೊಲೀಸರು ಬಿಡಲಿಲ್ಲ. ಇದರಿಂದ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಸಿಎಂ ನಿವಾಸದಲ್ಲಿ ಎದುರಲ್ಲಿ ಪ್ರತಿಭಟನೆ ಮಾಡಿದರು.

೩೦೦೦ ಹುದ್ದೆ ಖಾಲಿ ಇದ್ರು ಇನ್ನೂ ನೇಮಕ ಮಾಡದೇ ಇರುವ ರಾಜ್ಯ ಸರ್ಕಾರದ ಕ್ರಮವನ್ನು ಕೈಗೊಂಡಿಲ್ಲ, ಈ ಹಿನ್ನೆಲೆಯಲ್ಲಿ ನೇಮಕಾತಿಗಾಗಿ ವಿದ್ಯಾರ್ಥಿಗಳು ಪಟ್ಟುಹಿಡಿದಿದ್ದಾರೆ. ಇದ್ರ ಬಗ್ಗೆ ಮನವಿ ನೀಡಲು ಸಿಎಂ ನಿವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.




