ಬೆಂಗಳೂರು: ಒಂದೆರಡು ತಿಂಗಳಲ್ಲಿ ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯ ಉದ್ಘಾಟನೆಗೆ ಪೂರ್ವಭಾವಿಯಾಗಿ ರಾಜ್ಯಾದ್ಯಂತದಿಂದ ಪವಿತ್ರ ಮೃತ್ತಿಕೆ (ಮಣ್ಣು) ಮತ್ತು ಜಲವನ್ನು ಸಂಗ್ರಹಿಸುವ ವಿಶಿಷ್ಟ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಚಾಲನೆ ನೀಡಿದರು.
ಇದರ ಅಂಗವಾಗಿ ವಿಮಾನ ನಿಲ್ದಾಣದ ಆವರಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ನಾಡಪ್ರಭು ಕೆಂಪೇಗೌಡ ಥೀಮ್ ಪಾರ್ಕ್ ನಿರ್ಮಾಣಕ್ಕೂ ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಮಾತನಾಡಿ, ‘ ಇತಿಹಾಸ ಅರಿಯದವರು ಇತಿಹಾಸ ಸೃಷ್ಟಿಸಲಾರರು. ರಾಜ್ಯ ಸರಕಾರವು ವಿಧಾನಸೌಧದ ಆವರಣದಲ್ಲೂ 50 ಕೋಟಿ ರೂ. ವೆಚ್ಚದಲ್ಲಿ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಲಿದೆ. ಜೊತೆಗೆ ಲಾಲ್ ಬಾಗ್ ಆವರಣದಲ್ಲೂ ನಾಡಪ್ರಭುವಿನ ಪ್ರತಿಮೆ ಅನಾವರಣಗೊಳ್ಳಲಿದೆ ಎಂದು ಘೋಷಿಸಿದರು.
ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ ಮತ್ತು ಥೀಮ್ ಪಾರ್ಕ್ ಸ್ಥಾಪನೆಗೆ ಸರಕಾರವು 84 ಕೋಟಿ ರೂ. ವಿನಿಯೋಗಿಸುತ್ತಿದೆ. ಈ ಪ್ರತಿಮೆಗೆ ಕೆಂಪೇಗೌಡರ ಆಶಯಗಳನ್ನು ಸಂಕೇತಿಸುವಂತೆ ‘ಪ್ರಗತಿ ಪ್ರತಿಮೆ’ (Statue of Prosperity ) ಎಂದು ನಾಮಕರಣ ಮಾಡಲಾಗುತ್ತಿದೆ ಎಂದು ಅವರು ನುಡಿದರು.

ಅಭಿಯಾನವು ರಾಜ್ಯದ ಎಲ್ಲರನ್ನೂ ಒಳಗೊಳ್ಳಲಿದ್ದು, ನವ ಕರ್ನಾಟಕ ನಿರ್ಮಾಣದ ದೊಡ್ಡ ಹೆಜ್ಜೆಯಾಗಿದೆ. ಇದು ಸರಕಾರದ ಸಮಗ್ರ ಅಭಿವೃದ್ಧಿ ಸಂಕಲ್ಪದ ಸಂಕೇತವಾಗಿದೆ ಎಂದು ಅವರು ಬಣ್ಣಿಸಿದರು.
ಕೆಂಪೇಗೌಡರ ದೂರದೃಷ್ಟಿಯ ಹಿರಿಮೆ
ಸಚಿವ ಮತ್ತು ನಾಡಪ್ರಭು ಕೆಂಪೇಗೌಡ ಪಾರಂಪರಿಕ ಅಭಿವೃದ್ಧಿ ತಾಣಗಳ ಪ್ರಾಧಿಕಾರದ ಉಪಾಧ್ಯಕ್ಷ ಡಾ.ಸಿ ಎನ್ ಅಶ್ವತ್ಥ ನಾರಾಯಣ ಮಾತನಾಡಿ, ‘ಬೆಂಗಳೂರಿನ ಇಂದಿನ ಕೀರ್ತಿಗೆ ಈ ನಗರಕ್ಕೆ ಬುನಾದಿ ಹಾಕಿದ ಕೆಂಪೇಗೌಡರೇ ಕಾರಣ. ಅವರ ಪ್ರತಿಮೆ ಉದ್ಘಾಟನೆಗೆ ಪೂರ್ವಭಾವಿಯಾಗಿ ಇಂದಿನಿಂದ 45 ದಿನಗಳ ಕಾಲ ರಾಜ್ಯ ಮಟ್ಟದ ಅಭಿಯಾನ ನಡೆಯಲಿದೆ. ಇದರ ಅಂಗವಾಗಿ ಎಲ್ಲ ಹಳ್ಳಿಗಳ ವ್ಯಾಪ್ತಿಯ ಕೆರೆಕಟ್ಟೆಗಳು ಮತ್ತು ನದಿಗಳಿಂದ ಪವಿತ್ರವಾದ ಮಣ್ಣು ಮತ್ತು ಜಲ ಸಂಗ್ರಹಿಸಲಾಗುವುದು. ಬಳಿಕ ಪ್ರಧಾನಿ ಮೋದಿ ಪ್ರತಿಮ ಲೋಕಾರ್ಪಣೆ ಮಾಡಲಿದ್ದಾರೆ. ಪ್ರಧಾನಿಯವರ ಸಮಯ ನೋಡಿಕೊಂಡು ನವೆಂಬರ್ 1ರಂದು ಅನಾವರಣ ಮಾಡುವ ಉದ್ದೇಶ ಇದೆ” ಎಂದರು.
ಕೆಂಪೇಗೌಡರು ದೂರದೃಷ್ಟಿ ಹೊಂದಿದ ನಾಯಕರಾಗಿದ್ದರು. ಅವರಿಂದ ಬೆಂಗಳೂರು ಸುರಕ್ಷಿತ ಮತ್ತು ಸುಭದ್ರವಾಗಿದೆ. ಅಂತಹ ಮಹಾಪುರುಷನ ನೆನಪನ್ನು ರಾಜ್ಯ ಸರಕಾರ ಅಜರಾಮರಗೊಳಿಸುತ್ತಿದೆ ಎಂದರು.

ಅಭಿಯಾನದ ಅಂಗವಾಗಿ 31 ಜಿಲ್ಲೆಗಳಿಗೂ ತಲಾ ಒಂದು ಎಲ್ಇಡಿ ಅಲಂಕೃತ ವಾಹನ ಹೋಗಲಿದೆ. ಇದರಲ್ಲಿ ಪುಣ್ಯಪುರುಷರ ಸಂದೇಶಗಳು ಇರಲಿದ್ದು, ಕೆಂಪೇಗೌಡರನ್ನು ಕುರಿತ ಸಾಕ್ಷ್ಯಚಿತ್ರ ಪ್ರಸಾರವೂ ಆಗಲಿದೆ ಎಂದು ಅವರು ಮಾಹಿತಿ ನೀಡಿದರು.
23 ಎಕರೆ ವಿಸ್ತೀರ್ಣದಲ್ಲಿ ಥೀಮ್ ಪಾರ್ಕ್ ಅಭಿವೃದ್ಧಿ ಎರಡು ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತದ ಕಾಮಗಾರಿ ಇನ್ನು ಒಂಬತ್ತು ತಿಂಗಳಲ್ಲಿ ಮುಗಿಯಲಿದೆ. ಇದಕ್ಕಾಗಿ ಈಗಾಗಲೇ 20 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಅವರು ವಿವರಿಸಿದರು.

ಪಾರಂಪರಿಕ ತಾಣಗಳ ಅಭಿವೃದ್ಧಿ ಪ್ರಾಧಿಕಾರವು ಕೆಂಪೇಗೌಡರ ಜೀವನಕ್ಕೆ ಸಂಬಂಧಿಸಿದ 46 ಸ್ಥಳಗಳಿಗೆ ಕಾಯಕಲ್ಪ ನೀಡುತ್ತಿದೆ. ಮಾಗಡಿ ತಾಲ್ಲೂಕಿನ ಕೆಂಪಾಪುರವನ್ನು ವೀರಸಮಾಧಿ ತಾಣವನ್ನಾಗಿ ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಅವರು ಹೇಳಿದರು. ಐವತ್ತು ಕೋಟಿ ವೆಚ್ಚದಲ್ಲಿ ಕೆಂಪೇಗೌಡರ ಅಧ್ಯಯನ ಕೇಂದ್ರ ಬೆಂಗಳೂರು ವಿವಿ ಆವರಣದಲ್ಲಿ ತಲೆಎತ್ತಲಿದೆ ಎಂದು ಹೇಳಿದರು.




