ಬೆಂಗಳೂರು : ಬಿಡಿಎ ವಸತಿ ಯೋಜನೆ ಅನುಷ್ಠಾನದಲ್ಲಿ ಲಂಚ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬದ ಸದಸ್ಯರುಗಳು ಹಾಗೂ ಸಚಿವ ಎಸ್ ಟಿ ಸೋಮಶೇಖರ್ ವಿರುದ್ಧ ಎಫ್ ಐ ಆರ್ ದಾಖಲಿಸಿ ತನಿಖೆ ಕೈಗೊಳ್ಳುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ಆದೇಶ ನೀಡಿದೆ.
ಈ ಪ್ರಕರಣದಲ್ಲಿ ಬಿ ಎಸ್ ಯಡಿಯೂರಪ್ಪ ಅವರು ಮೊದಲನೇ ಆರೋಪಿಯಾಗಿದ್ದರೆ, ಸಚಿವ ಸೋಮಶೇಖರ್ ಅವರು ಆರನೇ ಆರೋಪಿಯಾಗಿದ್ದಾರೆ. ಉಳಿದಂತೆ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ, ಮೊಮ್ಮಗ ಶಶಿಧರ ಮರಡಿ, ಅಳಿಯ ಸಂಜಯಶ್ರೀ, ಮತ್ತೊಬ್ಬ ಅಳಿಯ ವಿರೂಪಾಕ್ಷಪ್ಪ ಯಮಕನಮರಳಿ, ಬಿಡಿಎ ಗುತ್ತಿಗೆದಾಕರ ಚಂದ್ರಕಾಂತ ರಾಮಲಿಂಗಂ ಹಾಗೂ ಕ್ರೆಸಂಟ್ ಹೋಟೆಲ್ ಮಾಲೀಕ ಕೆ ರವಿ ಆರೋಪಿಗಳಾಗಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಾಹಂ ಸಲ್ಲಿಸಿರುವ ಖಾಸಗಿ ದೂರನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ವಿಚಾರಣೆ ನಡೆಸಲು ಸೂಚಿಸಿದ್ದಾರೆ. ಹಾಗೆಯೇ ಎಲ್ಲಾ ಆರೋಪಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸುವಂತೆ ಸೂಚಿಸಿ, ವಿಚಾರಣೆಯನ್ನು ಮುಂದೂಡಿದರು.

ಈ ಹಿಂದೆ ವಿಚಾರಣೆ ನಡೆಸಲು ರಾಜ್ಯಪಾಲರು ಪೂರ್ವಾನುಮತಿ ನೀಡಲು ನಿರಾಕರಿಸಿದ್ದರಿಂದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಖಾಸಗಿ ದೂರನ್ನು 2021ರಲ್ಲಿ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿದ್ದ ಸಮಾಜಿಕ ಕಾರ್ಯಕರ್ತ ಅಬ್ರಾಹಂ ಹೈಕೋರ್ಟ್ ನಲ್ಲಿ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು.
ಕಳೆದ ಏಳರಂದು ಹೈಕೋರ್ಟ್ ಏಕಸದಸ್ಯ ಪೀಠವು, ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪ್ರಕರಣದ ವಿಚಾರಣೆ ನಡೆಸಲು ಹಸಿರು ನಿಶಾನೆ ತೋರಿತ್ತು.
# b s Yediyurapp #b y vijendra #special court #lokayuktha #fir #investigate #bda #minister st somashekar #t j abrahum




