ಬೆಂಗಳೂರು : ಮತದಾರರ ಪರಿಷ್ಕರಣೆ ಅಕ್ರಮ ಆರೋಪ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ. ಕೆಲವು ನ್ಯೂಸ್ ಪೋರ್ಟಲ್ ಮತ್ತು ದೃಶ್ಯಮಾಧ್ಯಮಗಳಲ್ಲಿ ಮತದಾರರ ವೈಯಕ್ತಿಕ ವಿವರಗಳನ್ನು ಸಂಗ್ರಹಿಸಲಾಗಿದೆ ಎಂದು ವರದಿಯಾಗಿದೆ. ಜಿಲ್ಲಾ ಚುನಾವಣಾಧಿಕಾರಿ, ಬಿ.ಬಿ.ಎಂ.ಪಿ. ಯಾವುದೇ ಸಂಸ್ಥೆಗೆ ಸಮೀಕ್ಷೆ ನಡೆಸಲು ಅನುನತಿ ನೀಡಿಲ್ಲ. ಸರ್ಕಾರೇತರ ಸಂಸ್ಥೆ ಚಿಲುಮೆರವರಿಗೆ ಮತದಾರರ ಜಾಗೃತಿ ಅಭಿಯಾನದ ಬಗ್ಗೆ ಅರಿವು ಮೂಡಿಸಲು ನೀಡಿದ್ದ ಅನುಮತಿಯನ್ನು ದೂರು ಬಂದ ಕೂಡಲೇ ಜಿಲ್ಲಾ ಚುನಾವಣಾಧಿಕಾರಿ, ಬಿ.ಬಿ.ಎಂ.ಪಿ. ರದ್ದುಪಡಿಸಿದ್ದಾರೆ.

ಬೂತ್ ಮಟ್ಟದ ಅಧಿಕಾರಿ ಗುರುತಿನ ಚೀಟಿ ದುರುಪಯೋಗ ಸಂಬಂಧ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿರವರು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಚುನಾವಣಾ ನಿಯಮಗಳನ್ನು ಉಲ್ಲಂಘಿಸಿರುವ ಬಗ್ಗೆ ತನಿಖೆ ನಡೆಸಿ ಉಲ್ಲಂಘನೆ ಪ್ರಕರಣ ಕಂಡು ಬಂದಲ್ಲಿ ನಿಯಮಾನುಸಾರ ಕ್ರಮಕೈಗೊಳ್ಳುತ್ತೇವೆ. ಈ ಬಗ್ಗೆ ಬಿ.ಬಿ.ಎಂ.ಪಿಗೆ ಚುನಾವಣಾಧಿಕಾರಿಗಳು ಸೂಚನೆ ನೀಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ..




