ಬೆಂಗಳೂರು : ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗಾಗಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದಾರೆ. ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇರುವಾಗಲೆ ಭಾಸ್ಕರ್ ರಾವ್ ಅವರು ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದು, ಇವರು 1990ನೇ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ.
ಪ್ರಸ್ತುತ ರೈಲ್ವೆ ವಿಭಾಗದ ಎಡಿಜಿಪಿಯಾಗಿ ಸೇವೆ ಸಲ್ಲಿಸುತ್ತಿರುವ ಭಾಸ್ಕರ್ ರಾವ್, ರಾಜ್ಯದ ನಾನಾ ಇಲಾಖೆಗಳಲ್ಲಿ ನಾಡಿನ ಸೇವೆ ಸಲ್ಲಿಸಿದ್ದಾರೆ.
ಭಾಸ್ಕರ್ ರಾವ್ ಅವರು ಸಲ್ಲಿಸಿರುವ ಅರ್ಜಿಯಲ್ಲಿ ನಿವೃತ್ತಿಗೆ ವೈಯಕ್ತಿಕ ಕಾರಣ ನೀಡಿದ್ದಾರೆ. ಈ ಸಂಬಂಧ ಸರ್ಕಾರದ ಮುಖ್ಯಕಾರ್ಯದರ್ಶಿ ಮತ್ತು ಡಿಜಿ,ಐಜಿಪಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಭಾಸ್ಕರ್ ರಾವ್ ಅವರ ಮನವಿಗೆ ಸರ್ಕಾರ ಒಪ್ಪಿಗೆ ನೀಡಬೇಕಾಗಿದೆ. ಅಲ್ಲಿಯವರೆಗೆ ಅವರು ಎಡಿಜಿಪಿಯಾಗಿ ಸೇವೆ ಸಲ್ಲಿಸಲಿದ್ದಾರೆ.
ಫೋನ್ ಕದ್ದಾಲಿಕೆ ಸಂಬಂಧ ಕೆಲ ದಿನದಿಂದ ಸಾಕಷ್ಟು ಹೋರಾಟವನ್ನು ಭಾಸ್ಕರ್ ರಾವ್ ನಡೆಸಿದ್ದರು. ಇದೀಗ ಸ್ವಯಂ ನಿವೃತ್ತಿಗೆ ಭಾಸ್ಕರ್ ರಾವ್ ಅರ್ಜಿ ಸಲ್ಲಿಸಿದ್ದು, ಮುಂದಿನ ದಿನಗಳಲ್ಲಿ ರಾಜಕೀಯ ಕ್ಕೆ ಎಂಟ್ರಿ ಕೊಡಲಿದ್ದಾರೆ ಎನ್ನುವ ಪ್ರಶ್ನೆಯೂ ಮೂಡಿದೆ. ಬೆಂಗಳೂರಿನ ಬಸವಗುಡಿಯಿಂದ ಅವರು ಚುನಾವಣೆ ಎದುರಿಸಲಿದ್ದಾರೆ ಎಂದು ಅವರ ಆಪ್ತ ವಲಯದಲ್ಲಿ ಕೇಳಿ ಬರುತ್ತಿರುವ ಮಾತು.
ಭಾಸ್ಕರ್ ರಾವ್ ಬಗ್ಗೆ ಒಂದಷ್ಟು :
ಭಾಸ್ಕರ್ ರಾವ್ 1954 ರಲ್ಲಿ ಜನಿಸಿದ್ದು, ಅವರು 1990ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದಾರೆ. ಬೆಂಗಳೂರು ಮಹಾನಗರ ಕಮಿಷನರ್ ಆಗಿ 2019-2020ರವರೆಗೆ ಸೇವೆ ಸಲ್ಲಿಸಿದ್ದರು. ಕರ್ನಾಟಕ ಸ್ಟೇಟ್ ರಿಸರ್ವ್ ಪೊಲೀಸ್ ಪಡೆಯಲ್ಲಿ ಎಡಿಜಿಪಿಯಾಗಿ ಸೇವೆ ಸಲ್ಲಿಸಿದ್ದು ಬಳಿಕ ಇಂಟರ್ನಲ್ ಸೆಕ್ಯೂರಿಟಿ ಡಿವಿಷನ್ನಲ್ಲೂ ಸೇವೆ ಸಲ್ಲಿಸಿದರು.




