ಬೆಂಗಳೂರು: ಚುನಾವಣಾ ಆಯೋಗ, ಐಟಿ ಅಧಿಕಾರಿಗಳು ಸ್ವತಂತ್ರವಾಗಿ ಕೆಲಸ ಮಾಡುತ್ತಿದ್ದು, ಯಾರು ಕಳ್ಳರಿದ್ದಾರೆ, ಅವರು ಸಿಗುತ್ತಾರೆ. ಕಾಂಗ್ರೆಸ್ ನವರು ಯಾಕೆ ಭಯ ಪಡಬೇಕು. ಅವರು ಇಷ್ಟು ದಿನ ಅಕ್ರಮವಾಗಿ ಗಳಿಸಿರುವ ಕಪ್ಪು ಹಣ ಹೊರಗೆ ಬರುತ್ತದೆ ಎಂಬ ಭಯ ಇರುವ ಕಾರಣಕ್ಕೆ ಈ ರೀತಿಯ ತಂತ್ರ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ವಿಧಾನಸೌಧದ ಬಳಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಚುನಾವಣಾ ಆಯೋಗ ಎಲ್ಲ ಪಕ್ಷದವರ ಮೇಲೆ ದಾಳಿ ಮಾಡಿ ವಸ್ತುಗಳನ್ನು ವಶ ಪಡಿಸಿಕೊಳ್ಳುತ್ತಿದೆ. ನಿಷ್ಪಕ್ಷಪಾತವಾಗಿ ನಡೆಯುತ್ತಿರುವ ದಾಳಿಯನ್ನು ತಡೆಯಲು, ಅಧಿಕಾರಿಗಳ ಮೇಲೆ ಒತ್ತಡ ತರುವ ಕೆಲಸ ಮಾಡಲಾಗುತ್ತಿದೆ. ಕುಂಬಳಕಾಯಿ ಕಳ್ಳ ಎಂದರೆ ಇವರು ಬೆನ್ನು ಮುಟ್ಟಿಕೊಳ್ಳುತ್ತಿದ್ದಾರೆ. ಈಗಾಗಲೇ ಪ್ರತಿಯೊಂದು ಜಿಲ್ಲೆಗೂ ಐಟಿ ಅಧಿಕಾರಿಗಳು ಇದ್ದಾರೆ ಎಂದರು.
ಚುನಾವಣಾ ಆಯೋಗಕ್ಕೂ ಬಿಜೆಪಿ ಸೋಲುವುದಕ್ಕೂ ಸಂಬಂಧವಿಲ್ಲ. ಕಾಂಗ್ರೆಸ್ ಈ ಬಾರಿ ಸೋಲುವುದು ನಿಶ್ಚಿತ. ನಮಗೆ ಗೆಲ್ಲುವ ಆತ್ಮವಿಶ್ವಾಸವಿದೆ ಎಂದರು.




