ಬೆಂಗಳೂರು: KSDL ಗುತ್ತಿಗೆ ಲಂಚ ಪ್ರಕರಣದಲ್ಲಿ ಲೋಕಾಯುಕ್ತರ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಹಿದ್ದಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಷರತ್ತು ಬದ್ದ ಜಾಮೀನು ಮಂಜೂರು ಮಾಡಲಾಗಿದೆ.ಚನ್ನಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 5 ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದೆ. 5 ಲಕ್ಷ ರೂಪಾಯಿ ಬಾಂಡ್, ಇಬ್ಬರ ಶ್ಯೂರಿಟಿ ನೀಡುವಂತೆ ನ್ಯಾಯಾಲಯ ಸೂಚನೆ ನೀಡಿದೆ.
ಮೂರು ವಾರಗಳಿಗೊಮ್ಮೆ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಬೇಕು. ತನಿಖಾಧಿಕಾರಿಗಳಿಗೆ ಪಾಸ್ಪೋಟ್ ಒಪ್ಪಿಸಬೇಕು, ಸಾಕ್ಷಿದಾರರಿಗೆ ಬೆದರಿಕೆ ಹಾಕಬಾರದು. ನ್ಯಾಯಾಲಯದ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಟ್ಟು ಹೋಗಬಾರದು ಎಂದು ನ್ಯಾಯಾಲಯ ನೀಡಿದ ಆದೇಶದಲ್ಲಿ ತಿಳಿಸಿದೆ.
ಇನ್ನೊಂದೆಡೆ ಮಾಡಾಳ್ ವಿರೂಪಾಕ್ಷಪ್ಪ ಜೈಲು ಸೇರುತ್ತಿದ್ದಂತೆ ಚನ್ನಗಿರಿ ಕ್ಷೇತ್ರದ ಟಿಕೆಟ್ ಅನ್ನು ಬಿಜೆಪಿ ಶಿವಕುಮಾರ್ ಅವರಿಗೆ ನೀಡಿತ್ತು. ವಿರೂಪಾಕ್ಷಪ್ಪ ಅವರಿಗೆ ಟಿಕೆಟ್ ನೀಡಲು ಅವರ ಅಭಿಮಾನಿಗಳು ವರಿಷ್ಠರ ಮೇಲೆ ಒತ್ತಡ ಹೇರಿದ್ದರು. ಆದರೆ, ವರಿಷ್ಠರು ಮಾತ್ರ ಇದಕ್ಕೆ ಕ್ಯಾರೆ ಅನ್ನಲಿಲ್ಲ. ವಿರೂಪಾಕ್ಷಪ್ಪ ಅವರ ಜಾಮೀನು ಇದೀಗ ಮತ್ತೆ ರಾಜಕೀಯ ಗರಿಗೆದರಿದೆ. ಕೋಟ್ಯಂತರ ರೂಪಾಯಿ ನಗದು ಪತ್ತೆ
ಮಾರ್ಚ್ 2ರಂದು ಮಾಡಾಳ್ ವಿರೂಪಾಕ್ಷಪ್ಪ ಕಚೇರಿ, ಮನೆ, ಮಗ ಪ್ರಶಾಂತ್ ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ನಡೆದಿತ್ತು. ಪುತ್ರ ಪ್ರಶಾಂತ್ ಕಚೇರಿಯಲ್ಲಿ 2.02 ಕೋಟಿ ನಗದು, ಶಾಸಕರ ನಿವಾಸದಲ್ಲಿ 6 ಕೋಟಿಗೂ ಅಧಿಕ ನಗದು ಪತ್ತೆಯಾಗಿತ್ತು.




