ಬೆಂಗಳೂರು : ಸುಸ್ಥಿರ ಬೆಳವಣಿಗೆ ಮತ್ತು ಹೂಡಿಕೆಗಳಿಗೆ ಆದ್ಯತೆ ನೀಡುತ್ತಿರುವ ರಾಜ್ಯ ಸರ್ಕಾರ ಹೊಸ ತಂತ್ರಜ್ಞಾನಗಳಿಗೆ ಸಂಬಂಧಿಸಿದ ಸಹಭಾಗಿತ್ವಕ್ಕೆ ಸದಾ ಆಸಕ್ತಿ ತೋರುತ್ತಾ ಬಂದಿದ್ದು, ಭವಿಷ್ಯದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದ ಬೆಳವಣಿಗೆಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ ಬೆಂಗಳೂರು ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿರುವ “ಉದ್ಯಮಿಯಾಗು ಉದ್ಯೋಗ ನೀಡು’ ಹಾಗೂ “ಕೈಗಾರಿಕಾ ಅದಾಲತ್’ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೂಡಿಕೆ, ಉದ್ಯೋಗ ಮತ್ತು ಆವಿಷ್ಕಾರಕ್ಕೆ ನಮ್ಮ ಸರ್ಕಾರ ಹೆಚ್ಚಿನ ಒತ್ತು ನೀಡಲಿದೆ,” ಎಂದರು.
ಯುವ ಶಕ್ತಿ ಬಗ್ಗೆ ನನಗೆ ಅಪಾರ ನಂಬಿಕೆ ಇದೆ. ಉದ್ಯಮ ಸ್ಥಾಪಿಸಿ ಸಹಸ್ರಾರು ಸಂಖ್ಯೆಯಲ್ಲಿ ಉದ್ಯೋಗ ಸೃಷ್ಟಿಸುವ ತಾಕತ್ತು ಇವರಲ್ಲಿದೆ. ಈ ಕಾರ್ಯಕ್ರಮಕ್ಕೆ ಆಗಮಿಸಿರುವ ವಿದ್ಯಾರ್ಥಿಗಳೇ ಮುಂದೆ ಉದ್ಯಮಿಗಳಾಗಿ ಇಂಥ ಕಾರ್ಯಕ್ರಮದಲ್ಲಿ ಮುಂದಿನ ಸಾಲಿನಲ್ಲಿ ಕೂರುವರು ಎಂದು ಮುಖ್ಯಮಂತ್ರಿ ಅವರು ಅಭಿಪ್ರಾಯಪಟ್ಟರು.

“ಯುವಜನರಿಗೆ ನೆರವಾಗುವ ಉದ್ದೇಶದಿಂದ “ಉದ್ಯಮಿಯಾಗು ಉದ್ಯೋಗ ನೀಡು’ ಕಾರ್ಯಕ್ರಮ ಮತ್ತು ಕೈಗಾರಿಕೆಗಳ ಸಮಸ್ಯೆ ಇತ್ಯರ್ಥಗೊಳಿಸಲು “ಕೈಗಾರಿಕಾ ಅದಾಲತ್’ ಹಮ್ಮಿಕೊಂಡಿರುವುದು ಶ್ಲಾಘನೀಯ. ಇಂಥ ಕಾರ್ಯಕ್ರಮಗಳಿಂದಾಗಿಯೇ ರಾಜ್ಯ ಇಂದು ದೇಶದಲ್ಲೇ ನಂಬರ್ 1 ಕೈಗಾರಿಕಾ ಸ್ನೇಹಿ ರಾಜ್ಯ ಎನಿಸಿಕೊಂಡಿದೆ,” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ರಾಜ್ಯದ ಎಲ್ಲ ಭಾಗಗಳಲ್ಲಿ ‘ಉದ್ಯಮಿಯಾಗು ಉದ್ಯೋಗ ನೀಡು’ ಕಾರ್ಯಕ್ರಮ:
ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಮುರುಗೇಶ್ ಆರ್. ನಿರಾಣಿ ಮಾತನಾಡಿ,” ಯುವಜನರು ಶಿಕ್ಷಣ ಪೂರೈಸಿದ ನಂತರ ಕೆಲಸ ಹುಡುಕುವ ಬದಲು ಅವರೇ ಉದ್ಯಮ ಸ್ಥಾಪಿಸಿ ಇತರರಿಗೆ ಉದ್ಯೋಗ ನೀಡುವಂತಾಗಬೇಕು. ಈ ನಿಟ್ಟಿನಲ್ಲಿ ಎಲ್ಲ ಅಗತ್ಯ ಮಾಹಿತಿ ಒದಗಿಸಲು ನಮ್ಮ ಇಲಾಖೆ ಒಂದು ದಿನದ ಕಾರ್ಯಾಗಾರ ಆಯೋಜಿಸಿದೆ.
ಬೆಂಗಳೂರಿನ ನಂತರ, ಕಲಬುರಗಿ, ಮೈಸೂರು, ಬೆಳಗಾವಿ, ಕರಾವಳಿ ಭಾಗದ ಮಂಗಳೂರು ಹಾಗೂ ತುಮಕೂರಿನಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಆ ಭಾಗದ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿ ಆರಂಭಿಸಬಹುದಾದ ಉದ್ಯಮಗಳ ಮಾಹಿತಿ ನೀಡಲಾಗುತ್ತದೆ. ಮುಖ್ಯವಾಗಿ ಸ್ಥಳೀಯ ಯಶಸ್ವಿ ಉದ್ಯಮಿಗಳ ಮಾರ್ಗದರ್ಶನ ಒದಗಿಸಲಾಗುವುದು ಎಂದರು.

“ನಮ್ಮ ವಿದ್ಯಾರ್ಥಿಗಳಿಗೆ ನಮ್ಮವರೇ ಆದ ಇನ್ಫೋಸಿಸ್ ಸಂಸ್ಥೆಯ ಸುಧಾಮೂರ್ತಿಯವರು ದೊಡ್ಡ ಪ್ರೇರಣೆ ಆಗಬೇಕು. ಎಂಜನಿಯರ್ ಪದವಿ ಪಡೆದು ಟಾಟಾ ಕಂಪನಿಯಲ್ಲಿ ಉದ್ಯೋಗ ಮಾಡಿ, ನಂತರದ ದಿನಗಳಲ್ಲಿ ಸ್ವಂತ ಐಟಿ ಕಂಪನಿ ಸ್ಥಾಪಿಸಿ ಜಗದ್ವಿಖಾತರಾದರು. ಮತ್ತೊಂದು ಉದಾಹರಣೆ ಅಂದರೆ ವಿಜಯ ಸಂಕೇಶ್ವರ ಅವರು. ಒಂದು ಲಾರಿಯಿಂದ ಆರಂಭವಾದ ಅವರ ಲಾಜಿಸ್ಟಿಕ್ ಉದ್ಯಮ ಇಂದು ದೇಶದಲ್ಲಿ ಅತಿ ದೊಡ್ಡ ಎತ್ತರಕ್ಕೆ ಬೆಳೆದಿದೆ. ಸಾಧಿಸುವ ಛಲ ಇದ್ದಾಗ ಮಾತ್ರ ಗುರಿ ಸಾಧ್ಯ. ಉದ್ಯಮ ಸ್ಥಾಪಿಸಿ ಮಾಲೀಕರಾಗಬೇಕೇ ಅಥವಾ ಉದ್ಯೋಗಕ್ಕೆ ಮತ್ತೊಬ್ಬರ ಕೈ ಕೆಳಗೆ ದುಡಿಯೇಬೇಕೇ ಎಂಬುದನ್ನು ವಿದ್ಯಾರ್ಥಿಗಳು ನಿರ್ಧರಿಸಬೇಕು,”ಎಂದು ನಿರಾಣಿ ಹೇಳಿದರು.
“ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಹಿಂದೆ ನಡೆದಿದ್ದ ಎರಡು ಜಾಗತಿಕ ಹೂಡಿಕೆದಾರರ ಸಮಾವೇಶ ಅಭೂತಪೂರ್ವ ಯಶಸ್ಸು ಕಂಡಿದ್ದು, ಮುಂದಿನ ವರ್ಷ ನವೆಂಬರನ್ನಲ್ಲಿ ನಡೆಯಲಿರುವ ವಿಶ್ವ ಜಾಗತಿಕ ಹೂಡಿಕೆದಾರರ ಸಮಾವೇಶವೂ ನಿಮ್ಮೆಲ್ಲರ ಸಹಕಾರದೊಂದಿಗೆ ಅತ್ಯಂತ ಯಶಸ್ವಿ ಆಗುವ ವಿಶ್ವಾಸ ನನಗಿದೆ,”ಎಂದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಮಾತನಾಡಿದ “ನಾನು ಮುಖ್ಯಮಂತ್ರಿಯಾಗಿದ್ದಾಗ ನಮ್ಮ ಸರ್ಕಾರದ ಹಲವು ಸುಧಾರಣಾ ಕ್ರಮಗಳ ಪರಿಣಾಮ ಕರ್ನಾಟಕವು ದೇಶದ ಆಕರ್ಷಕ ಹೂಡಿಕೆ ತಾಣವಾಗಿ ಹೊರಹೊಮ್ಮಿದೆ. ಇದೀಗ ಯುವ ಉದ್ಯಮಿಗಳನ್ನು ಸೃಷ್ಟಿಸಲು ಮತ್ತು ಕೈಗಾರಿಕಾ ವಿವಾದಗಳನ್ನು ಬಗೆಹರಿಸಲು ಆದ್ಯತೆ ನೀಡುವ ಮೂಲಕ ಕೈಗಾರಿಕಾ ಕ್ಷೇತ್ರದಲ್ಲಿ ಕರ್ನಾಟಕವನ್ನು ಅತ್ಯುನ್ನತ ಸ್ಥಾನಕ್ಕೆ ಕೊಂಡೊಯ್ಯಲು ಶ್ರಮಿಸುತ್ತಿರುವುದು ಶ್ಲಾಘನೀಯ ಎಂದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಡಾ.ಸಿ.ಎಎನ್.ಅಶ್ವತ್ಥನಾರಾಯಣ, ಎಂಟಿಬಿ ನಾಗರಾಜು, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ, ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಇವಿ ರಣಮಣರೆಡ್ಡಿ, ಎಂಎಸ್ಎಂಇ ನಿರ್ದೇಶಕರಾದ ಆರ್. ವಿನೋತ್ ಪ್ರಿಯಾ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣಾ, ಕೆಐಎಡಿಬಿ ಸಿಇಓ ಡಾ.ಎನ್ ಶಿವಶಂಕರ್ ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಉಪಸ್ಥಿತರಿದ್ದರು.




