ಬೆಂಗಳೂರು ; ವಿಧಾನ ಪರಿಷ್ತ ಸದಸ್ಯ ಹಾಗೂ ರಾಜ್ಯ ಕಾಂಗ್ರೆಸ್ಸಿನ ಹಿರಿಯ ಮುಖಂಡ ಬಿ ಕೆ ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಮಂಗಳವಾರ ರಾತ್ರಿ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಇದೀಗ ಕಾಂಗ್ರೆಸ್ ವಲಯದಲ್ಲಿ ಕುತೂಹಲಕ್ಕೆಡೆ ಮಾಡಿದೆ.
ವಿಧಾನ ಪರಿಷತ್ ನ ಸಭಾನಾಯಕ ಹಾಗೂ ಸಚಿವ ಸಂಪುಟದಲ್ಲಿ ಸ್ಥಾನ ವಂಚಿತರಾದ ಬಿ ಕೆ ಹರಿಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ತಮ್ಮಲ್ಲಿನ ಅಸಮಾಧಾನವನ್ನು ಹೊರಹಾಕಿದ್ದರು. ಇತ್ತೀಚೆಗೆ ನಡೆದ ಬಿಲ್ಲವ, ಈಡಿಗ ಸಮುದಾಯದ ಮುಖಂಡರ ಸಭೆಯಲ್ಲಿ ಹರಿಪ್ರಸಾದ್ ಮಾತನಾಡಿ, ನನಗೆ ಸಿಎಂ ಮಾಡುವುದು ಗೊತ್ತು, ಅಧಿಕಾರಿದಿಂದ ಅವರನ್ನು ಕೆಳಗೆ ಇಳಿಸುವುದೂ ಗೊತ್ತು ಎಂದು ಹೇಳಿದ್ದ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.

ಈ ಹೇಳಿಕೆ ಕಾಂಗ್ರೆಸ್ಸಿನಲ್ಲಿ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗುತ್ತಿದ್ದಂತೆಯೇ ದಿಢೀರ್ ಆಗಿ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಬಿ ಕೆ ಹರಿಪ್ರಸಾದ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಉಭಯ ನಾಯಕರು ಸಾಕಷ್ಟು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಡಿಕೆ ಶಿವಕುಮಾರ್ ಅವರೊಂದಿಗೆ, ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ಹಾಗೂ ಮಾಜಿ ಶಾಸಕ ಬಿ ಎಲ್ ಶಂಕರ್ ಜತೆಯಲ್ಲಿದ್ದರು. ಸಭೆಯ ನಂತರ ಉಭಯ ನಾಯಕರು ಯಾವುದೇ ರೀತಿಯ ಪ್ರತಿಕ್ರಿಯೆ ನೀಡದೇ ತೆರಳಿದರು.




