ಹುಬ್ಬಳ್ಳಿ : ಪ್ರಚೋದನಕಾರಿ ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿರುದ್ಧ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ ರಾಣಿ ಚೆನ್ನಮ್ಮಾ ಈದ್ಗಾ ಮೈದಾನದಲ್ಲಿ ಗಣೇಶ ವಿಸರ್ಜನೆ ಕಾರ್ಯಕ್ರಮವಿತ್ತು. ಈ ಕಾರ್ಯಕ್ರಮದ ಅಂಗವಾಗಿ ಮೈದಾನಕ್ಕೆ ಭೇಟಿ ಕೊಟ್ಟು ಗಣೇಶ ದರ್ಶನ ಪಡೆದಿದ್ದ ಮುತಾಲಿಕ್ ಬಳಿಕ ಮಾಧ್ಯಮಗಳಿಗೆ ಮಾತನಾಡಿದ್ದರು.

ಈ ಸಂದರ್ಭದಲ್ಲಿ ಅವರು ಇತರ ಧರ್ಮದ ಭಾವನೆಗಳಿಗೆ ಆಘಾತವನ್ನುಂಟು ಮಾಡುವ ಉದ್ದೇಶದಿಂದ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ.
ಹೀಗಾಗಿ ಮಹಾನಗರ ಪಾಲಿಕೆ 8ನೇ ವಲಯದ ಸಹಾಯ ಆಯುಕ್ತ ಚಂದ್ರಶೇಖರಗೌಡರು ನೀಡಿದ ದೂರಿನ ಹಿನ್ನೆಲಯಲ್ಲಿ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ಕಲಂ 153(ಎ), 295(ಎ) ಐಪಿಸಿ ಅಡಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಠಾಣಾ ಪಿಎಸ್ ಐ ಕವಿತಾರವರು ತನಿಖೆ ನಡೆಸುತ್ತಿದ್ದಾರೆ.




