ಬೆಂಗಳೂರು : ಸಿಂದಗಿ ಉಪಚುನಾವಣೆಯಲ್ಲಿ ನಿರೀಕ್ಷೆ ಮೀರಿ ನಾವು ಗೆಲುವು ಸಾಧಿಸಿದ್ದೇವೆ, ೩೦ ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದೇವೆ, ಕ್ಷೇತ್ರದ ಜನರಿಗೆ ಕೃತಜ್ಞತೆ ಸಲ್ಲಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದರು.
ಉಪಚುನಾವಣೆ ಫಲಿತಾಂಶದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾನಗಲ್ ನಲ್ಲಿ ತುಂಬಾ ನಿರೀಕ್ಷೆ ಇತ್ತು, ಯಾಕೆ ಹಿನ್ನಡೆಯಾಗಿದೆಯೋ ಗೊತ್ತಿಲ್ಲ, ಮುಖಂಡರು ಸೇರಿ ಇದರ ಬಗ್ಗೆ ಕಾರಣ ತಿಳಿಯಲಾಗುವುದು ಎಂದು ತಿಳಿಸಿದರು.
ಕಾಂಗ್ರೆಸ್ ನಾಯಕರು ಯಾಕೆ ಹಿಗ್ಗುತ್ತಿದ್ದಾರೋ ಗೊತ್ತಿಲ್ಲ, ಸಿದ್ದರಾಮಯ್ಯ ಬೀಗುವ ಅವಶ್ಯಕತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಮುಂದಿನ ವಿಧಾನಸಭಾ ಚುನಾವಣೆಗೆ ಇದು ದಿಕ್ಸೂಚಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಹಾನಗಲ್ ನಲ್ಲಿ ಬಿಜೆಪಿಗೆ ಹಿನ್ನಡೆ ವಿಚಾರವಾಗಿ ಮಾತನಾಡಿದ ಅವರು, ಸಿಎಂ ಬಸವರಾಜ್ ಬೊಮ್ಮಾಯಿ ನಾಯಕತ್ವದ ಬಗ್ಗೆ ಪ್ರಶ್ನೆ ಉದ್ಭವಿಸುವುದಿಲ್ಲ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಿದ್ದೇವೆ, ಸೋಲು, ಗೆಲುವನ್ನ ಸಮಾನವಾಗಿ ಹಂಚಿಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.
ಮುಂದಿನ ದಿನಗಳಲ್ಲಿ ಎಲ್ಲರೂ ಒಟ್ಟಾಗಿ ಪಕ್ಷವನ್ನು ಬಲಪಡಿಸುತ್ತೇವೆ, ಹಾನಗಲ್ ನಲ್ಲಿ ಯಾಕೆ ಹಿನ್ನಡೆಯಾಯ್ತು ಅನ್ನೋದನ್ನ ಎಲ್ಲರೂ ಕುಳಿತು ಚರ್ಚಿಸುತ್ತೇವೆ ಎಂದು ತಿಳಿಸಿದರು.




