ಬೆಂಗಳೂರು: ಪ್ರತಿನಿತ್ಯ ಬೆಳಗ್ಗೆ 10ರಿಂದ 10.30ರವರೆಗೆ ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರ ಭೇಟಿಗೆ ಸಮಯ ನೀಡುತ್ತೇನೆ. ತಮ್ಮ ಕ್ಷೇತ್ರದಲ್ಲಿನ ಕೆಲಸ ಹಾಗೂ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಅವರಿಗೆ ಅವಕಾಶ ನೀಡಲಾಗುವುದು. ಹೊರಗಡೆ ಹೋಗುವ ದಿನ ಹೊರತಾಗಿ ಬೆಂಗಳೂರಿನಲ್ಲಿರುವ ಎಲ್ಲಾ ದಿನ ಸಮಯಾವಕಾಶ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಈ ರೀತಿ ಉತ್ತರಿಸಿದರು.
ದೆಹಲಿ ಭೇಟಿ ವಿಚಾರವಾಗಿ ಕೇಳಿದಾಗ, “ಕಾವೇರಿ ನೀರು ಬಳಕೆ ವಿಚಾರವಾಗಿ ಸುಪ್ರೀಂ ಕೋರ್ಟ 2018ರಲ್ಲಿ ಕೊಟ್ಟ ತೀರ್ಮಾನ ಅನುಸಾರ ಬೆಂಗಳೂರಿಗೆ 24 ಟಿಎಂಸಿ ನೀರು ಬಳಸಿಕೊಳ್ಳಲು ವ್ಯವಸ್ಥೆ ಮಾಡಲು ಆದೇಶ ನೀಡಲಾಗಿದೆ. ಇನ್ನು ಪಕ್ಷದಲ್ಲಿ ಯಾರೇಲ್ಲಾ 3ಕ್ಕಿಂತ ಹೆಚ್ಚು ವರ್ಷಗಳಿಂದ ಪದಾಧಿಕಾರಿಗಳಾಗಿದ್ದಾರೆ ಅವರ ಸ್ಥಾನಕ್ಕೆ ಬೇರೆಯವರಿಗೆ ಅವಕಾಶ ನೀಡಬೇಕು ಎಂಬ ಚರ್ಚೆ ಆಗಿದೆ. ಇನ್ನು ಲೋಕಸಭೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಶೇ.75ರಷ್ಟು ಮಂತ್ರಿಗಳು ತಮ್ಮ ಜಿಲ್ಲೆಗಳಿಗೆ ಹೋಗಿ ಸಭೆ ಮಾಡಿದ್ದಾರೆ, ಉಳಿದವರು ಸಭೆ ಮಾಡಿ ಆದಷ್ಟು ಬೇಗ ತಮ್ಮ ವರದಿ ನೀಡಲಿದ್ದಾರೆ ಎಂದರು.
ಇನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಸ್ಥಗಿತಗೊಂಡಿರುವ ಕಾಮಗಾರಿಗಳ ಪರಿಶೀಲನೆ ಬಗ್ಗೆ ಕೇಳಿದಾಗ, “ಬಹಳ ಸಂತೋಷ. ಅವರು ಅಲ್ಲಿಗೆ ಹೋಗಲಿ. ಅವರಿಗೆ ಬೇಕಾದರೆ ಬಸವರಾಜ ಬೊಮ್ಮಾಯಿ ಹಾಗೂ ಲೋಕಾಯುಕ್ತ ವರದಿಗಳನ್ನು ಕಳುಹಿಸಿಕೊಡುತ್ತೇನೆ” ಎಂದು ತಿಳಿಸಿದರು.




