ಬೆಂಗಳೂರು : ಚುನಾವಣೆ ಸಂದರ್ಭದಲ್ಲಿ ನಾನಾ ರಾಜಕೀಯ ಪಕ್ಷಗಳು ಮತದಾರರಿಗೆ ನೀಡುತ್ತಿರುವ ಉಚಿತ ಗ್ಯಾರಂಟಿಗಳೆಂಬ ಆಮಿಷಗಳಿಗೆ ನಿರ್ಬಂಧವಿಧಿಸಬೇಕು ಎಂದು ಕೋರಿ ನಿವೃತ್ತ ಸೈನಿಕರೊಬ್ಬರು ರಾಜ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಬ್ರಿಗೇಡಿಯರ್ ರವಿ ಮುನಿಸ್ವಾಮಿ ಹಾಗೂ ಇತರರು ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿದ್ದು, ಈ ಅರ್ಜಿಯ ವಿಚಾರಣೆ ಇನ್ನಷ್ಟೇ ನ್ಯಾಯಾಧೀಶರ ಮುಂದೆ ಬರಬೇಕಾಗಿದೆ. ಬಿಜೆಪಿ, ಕಾಂಗ್ರೆಸ್, ರಾಜ್ಯ ಸರ್ಕಾರ, ಚುನಾವಣಾ ಆಯೋಗ ಹಾಗೂ ಇತರೆ ರಾಜಕೀಯ ಪಕ್ಷಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ನಾನಾ ರಾಜಕೀಯ ಪಕ್ಷಗಳು ಹೇಗಾದರೂ ಮಾಡಿ ಅಧಿಕಾರ ಹಿಡಿಯಲೇ ಬೇಕೆಂಬ ಉದ್ದೇಶದಿಂದ ಮತದಾರರಿಗೆ ಆಮಿಷ ಒಡ್ಡುತ್ತಿವೆ. ಅಧಿಕಾರದ ಲಾಲಸೆಗಾಗಿ ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡಲಾಗುತ್ತಿದೆ. ಆಮಿಷವೊಡ್ಡಿ ಮತಯಾಚನೆ ಮಾಡುವುದು ಸಂವಿಧಾನ ಬಾಹಿರ ಹಾಗೂ ಜನಪ್ರತಿನಿಧಿಗಳ ಕಾಯ್ದೆಯ ಸ್ಪಷ್ಟ ಉಲ್ಲಂಘನೆ, ಆದ್ದರಿಂದ ಚುನಾವಣಾ ಆಯೋಗ ಈ ಸಂಬಂಧ ಸೂಕ್ತ ಮಾರ್ಗಸೂಚಿಯನ್ನು ರಚಿಸಲು ನ್ಯಾಯಾಲಯ ನಿರ್ದೇಶಿಸಬೇಕು ಎಂದು ಸೈನಿಕರು ಅರ್ಜಿಯಲ್ಲಿ ಕೋರಿದ್ದಾರೆ.




