ನವದಹೆಲಿ : ಸಂಸತ್ ಮೇಲಿನ ದಾಳಿ ನಡೆದು 22 ವರ್ಷಗಳು ಸಂದಿವೆ. ಈ ಸಂದರ್ಭದಲ್ಲಿ ಹುತಾತ್ಮರಾದವರಿಗೆ ನಾನಾ ಗಣ್ಯರು ಶ್ರದ್ದಾಂಜಲಿ ಸಲ್ಲಿಸಿದ ಕೆಲವೇ ಗಂಟೆಗಳಲ್ಲಿ ಭದ್ರತಾ ಲೋಪದ ಘಟನೆಗೆ ಲೋಕಸಭೆ ಸಾಕ್ಷಿಯಾಯಿತು.
ಪ್ರಕರಣ ಸಂಬಂಧ ದೆಹಲಿ ಪೊಲೀಸರು ವಿಶೇಷ ವಿಭಾಗ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆ (UAPA) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಈ ಘಟನೆಯಲ್ಲಿ ಒಟ್ಟು ಆರು ಮಂದಿ ಭಾಗಿಯಾಗಿದ್ದು, ಮೈಸೂರಿನ ನಿವಾಸಿ ಮನೋರಂಜನ್ ಸೇರಿದಂತೆ ಒಟ್ಟು ಐವರನ್ನು ಬಂಧಿಸಲಾಗಿದೆ. ಮತ್ತೊರ್ವನ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಆರೋಪಿಗಳೆಲ್ಲರೂ ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಸಂಪರ್ಕ ಹೊಂದಿದ್ದು, ಕೆಲವು ದಿನಗಳ ಹಿಂದೆಯೇ ಯೋಜನೆ ರೂಪಿಸಿ, ನಿನ್ನೆ ಕಾರ್ಯಗತಗೊಳಿಸಿದ್ದರು.

ಎಂಜಿನಿಯರಿಂಗ್ ಪಜವೀಧರ ಮೈಸೂರಿನ ವಿಜಯನಗರದ ನಿವಾಸಿ ಮನೋರಂಜನ್ ಡಿ. ಲಖನೌದ ಸಾಗರ್ ಶರ್ಮಾ, ಹರಿಯಾಣದ ಹಿಸಾರ್ ನ ನೀಲಂ, ಮಹಾರಾಷ್ಟ್ರದ ಲಾತೂರ್ ನ ಅಮೋಲ್ ಶಿಂಧೆ ಹಾಗೂ ವಿಶಾಲ್ ಬಂಧಿತರಾಗಿದ್ದಾರೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.
ರೈತರ ಪ್ರತಿಭಟನೆ, ಮಣಿಪುರ ಬಿಕ್ಕಟ್ಟು ಮತ್ತು ನಿರುದ್ಯೋಗದಂತಹ ಜಲ್ವಂತ ಸಮಸ್ಯೆಗಳಿಂದ ನಾವು ಬೇಸತ್ತಿದ್ದೇವೆ. ಈ ಕಾರಣಕ್ಕಾಗಿ ಈ ಕೃತ್ಯವನ್ನು ನಡೆಸಿದ್ದೇವೆ ಎಂದು ವಿಚಾರಣೆ ಸಂದರ್ಭದಲ್ಲಿ ಆರೋಪಿ ಅಮೋಲ್ ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.
ಭಾರತ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ, ನಾವು ನಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಿದಾಗ ನಮ್ಮನ್ನು ಹೊಡೆದು ಜೈಲಿಗೆ ಹಾಕಲಾಗುತ್ತಿದೆ. ಹೀಗೆ ನಮ್ಮ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆಸಲಾಗುತ್ತಿದೆ, ನಾವು ಯಾವುದೇ ಸಂಘಟನೆಗೆ ಸೇರಿಲ್ಲ, ನಾವು ನಿರುದ್ಯೋಗಿಗಳು ಎಂದು ಪೊಲೀಸರು ಬಂಧಿಸಿದ ಸಂದರ್ಭದಲ್ಲಿ ನೀಲಂ ತಿಳಿಸಿದ್ದಾರೆ.




