ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಐತಿಹಾಸಿಕ ಹದಿನೈದನೇ ಬಜೆಟ್ ಮಂಡನೆ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದನ್ನು ಖಂಡಸಿ ಪ್ರತಿಪಕ್ಷಗಳು ತೀವ್ರ ಆಕ್ರೋಶ ಹೊರಹಾಕಿದ್ದು, ಸದನದಲ್ಲಿ ಕೋಲಾಹಲಕ್ಕೆ ಕಾರಣವಾಯಿತು.
ಬಜೆಟ್ ನಲ್ಲಿಯೂ ಸಹ ಕೇಂದ್ರ ಸರ್ಕಾರದ ವಿರುದ್ಧ ಟೀಕೆಗೆ ಬಳಸಿಕೊಳ್ಳುತ್ತೀರಾ ಎಂದು ಪ್ರತಿಪಕ್ಷದ ನಾಯಕ ಆರ್ ಅಶೋಕ್ ಕಿಡಿಕಾರಿದರು. ಈ ಸಂದರ್ಭದಲ್ಲಿ ಗದ್ದಲ ಏರ್ಪಟ್ಟಿತು. ಸ್ಪೀಕರ್ ಯು ಟಿ ಖಾದರ್ ಅವರ ಮನವಿ ಮೇರೆಗೂ ಪ್ರತಿಪಕ್ಷದ ನಾಯಕರು ಆಕ್ರೋಶದ ಮಾತುಗಳನ್ನು ಕಡಿಮೆ ಮಾಡಲಿಲ್ಲ. ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು.

ಪ್ರತಿಪಕ್ಷದವರ ಪ್ರತಿಭಟನೆಯ ನಡುವೆಯೂ ಕೂಡ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ ಮಂಡನೆಯನ್ನು ಮುಂದುವರೆಸಿದರು. ನಂತರ ಕಾಂಗ್ರೆಸ್ ನೇತೃತ್ವದ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಬಿಜೆಪಿ ಸದಸ್ಯರು ಹೊರನಡೆದರು. ಸಭಾತ್ಯಾಗ ಮಾಡುವಾಗ ಏನಿಲ್ಲಾ, ಏನಿಲ್ಲಾ, ಬಜೆಟ್ ನಲ್ಲಿ ಏನಿಲ್ಲಾ ಎಂದು ಹಾಡು ಗುನುಗುತ್ತಲೇ ಬಿಜೆಪಿ ಶಾಸಕರು ಹೊರನಡೆದರು.
ವಿಧಾನಸಭೆಯ ಪ್ರವೇಶ ದ್ವಾರದ ಬಳಿ ಮತ್ತೆ ಪೋಸ್ಚರ್ ಹಿಡಿದು ಶಾಸಕರು ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರ ಮಾಡದ ಕೆಲಸವನ್ನು ನಾವು ಮಾಡಿ ತೋರಿಸಿದ್ದೇವೆ. ಗ್ಯಾರಂಟಿ ಯೋಜನೆಯಿಂದ ದೇಶ ದಿವಾಳಿ ಎಂದರು. ರಾಜ್ಯ ಸರ್ಕಾರದ ಬೊಕ್ಕಸದಲ್ಲಿ ಹಣವಿಲ್ಲ ಎಂದು ಸುಳ್ಳು ಸುದ್ದಿ ಹಬ್ಬಿಸಿದರು. ಆದರೆ ನಾವು ಐದು ಗ್ಯಾರಂಟಿಗಳ್ನು ಜಾರಿ ಮಾಡಿದ್ದೇವೆ. ಕೇಂದ್ರ ಸರ್ಕಾರ ಈ ಗ್ಯಾರಂಟಿಗಳನ್ನು ಕಾಪಿ ಮಾಡಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದು ಬಿಜೆಪಿ ಶಾಸಕರ ಆಕ್ರೋಶಕ್ಕೆ ಕಾರಣವಾಯಿತು.




