ಬೆಂಗಳೂರು : ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಅಡ್ಡ ಮತದಾನ ಮಾಡಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಮತ್ತು ಅವರ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ವಿರುದ್ಧ ವ್ಯಂಗ್ಯವಾಡಿದರು.
ಪೂಜ್ಯ ತಂದೆಯವರು ಮತ್ತು ಅವರ ಮಗ ವಿಫಲರಾಗಿದ್ದಾರೆ ಎಂದು ಯತ್ನಾಳ್ ಅವರು ಟೀಕಿಸಿದರು. ಆದರೂ ಕೂಡ ಸೋಮಶೇಖರ್ ಅವರು ಆ ರೀತಿ ಮಾಡಬಾರದಿತ್ತು. ನಮ್ಮಲ್ಲಿ ಕೇವಲ ಹೊಂದಾಣಿಕೆ ರಾಜಕೀಯ ಆಗಿ ಹೋಗಿದೆ. ಿದೇ ಕಾರಣಕ್ಕೆ ನಾನು ಪದೇ ಪದೇ ಹೊಂದಾಣಿಕೆ ರಾಜಕೀಯದ ಬಗ್ಗೆ ಅಪಸ್ವರ ಎತ್ತುತ್ತಿರುವುದು ಎಂದು ಪಕ್ಷದ ನಾಯಕರ ವಿರುದ್ಧವೇ ಕಿಡಿಕಾರಿದರು.
ಯಾರಿಗೆ ಮತ ಎಂಬುದನ್ನು ಬಹಿರಂಗ ಪಡಿಸಲು ನಿರಾಕರಣೆ
ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ ಗಾಲಿ ಜನಾರ್ಧನ ರೆಡ್ಡಿ ಅವರು ಯಾರಿಗೆ ಮತ ಚಲಾಯಿಸಿದ್ದಾರೆ ಎನ್ನುವುದನ್ನು ಬಹಿರಂಗ ಪಡಿಸಲು ಅವರು ನಿರಾಕರಿಸಿದ್ದಾರೆ.
ಕ್ಷೇತ್ರದ ಮತದಾರರು ಮತ್ತು ಹೇಳಿದ ವ್ಯಕ್ತಿಗೆ ಮತ ಹಾಕಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಸಿಎಂ, ಡಿಸಿಎಂ ಸೇರಿದಂತೆ ಅನೇಕರು ನನ್ನನ್ನು ಸಂಪರ್ಕಿಸಿದ್ದರು. ಆದರೆ ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಹಾಕಿದ್ದೇನೆ ಎಂದರು.
ನಿನ್ನೆಯಷ್ಟೇ ಜನಾರ್ಧನ ರೆಡ್ಡಿಯವರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಈ ವಿದ್ಯಾಮಾನ ರಾಜಕೀಯ ವಲಯದಲ್ಲಿ ಸಾಕಷ್ಟು ಸದ್ದು ಮಾಡಿತ್ತು.




