ಕಾರವಾರ : ಬೆಂಗಳೂರು ನಗರದಲ್ಲಿ ನಡೆದ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರು ಬಾಯಿ ಮುಚ್ಚಿಕೊಂಡಿರಲಿ, ಇದೊಂದು ಪೂರ್ವ ನಿಯೋಜಿತ ಕೃತ್ಯ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ್ ಹೇಳಿದ್ದಾರೆ.
ಕಾರವಾರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಆಡಳಿತ ಅವಧಿಯಲ್ಲಿ ಅಂದರೆ, ಬಿ ಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಮತ್ತು ಬಸವರಾಜ್ ಬೊಮ್ಮಾಯಿ ಸೇರಿದಂತೆ ಇವರ ಕಾಲದಲ್ಲಿಯೂ ಬಾಂಬ್ ಸ್ಫೋಟ ಪ್ರಕರಣ ನಡೆದಿವೆ, ಕಾಂಗ್ರೆಸ್ ಅವಧಿಯಲ್ಲೂ ನಡೆದಿದೆ ಎಂದರು.
ರಾಜಕೀಯ ಪಕ್ಷಗಳ ಮುಖಂಡರುಗಳ ಟಿಕೆ ಟಿಪ್ಪಣಿಗಳು ತನಿಖೆಯ ದಾರಿ ತಪ್ಪಿಸುತ್ತಿವೆ ಎಂದು ಆಕ್ಷೇಪ ವ್ಯಕ್ತಪಡಿಸಿದ ಮುತಾಲಿಕ್, ರಾಜಕೀಯ ಪಕ್ಷಗಳ ನಿರ್ಲಕ್ಷ್ಯದ ಪರಿಣಾಮವೇ ಪದೇ ಪದೇ ರಾಜ್ಯದಲ್ಲಿ ಬಾಂಬ್ ಸ್ಫೋಟಕ್ಕೆ ಕಾರಣ ಎಂದು ತಿಳಿಸಿದರು.
ಪಾಕಿಸ್ತಾನ ಪರ ಘೋಷಣೆ ಕೂಗುವವರು ದೇಶದ ಪಾಲಿಗೆ ಕ್ಯಾನ್ಸರ್ ವೈರಸ್ ಇದ್ದಂತೆ, ಮೊದಲು ರಾಜ್ಯ ಸಭಾ ಸದಸ್ಯ ನಾಸಿರ್ ಹುಸೇನ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.




