ನವದೆಹಲಿ : ಚುನಾವಣಾ ಬಾಂಡ್ ಗಳಿಗೆ ಸಂಬಂಧಿಸಿದಂತೆ ಸುಪ್ರೀಂಕೋಟ್ ನೀಡಿದ್ದ ಗಡುವು ವಿಸ್ತರಣೆ ಕೋರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ. ಹಾಗೆಯೇ ನಾಳೆಯೊಳಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ನ್ಯಾಯಾಲಯ ಸೂಚನೆ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು ಮಾರ್ಚ್ 15ರ ಸಂಜೆ 5 ಗಂಟೆಯೊಳಗೆ ಬ್ಯಾಂಕ್ ಹಂಚಿಕೊಂಡಿರುವ ಎಲ್ಲಾ ವಿವರಗಳನ್ನು ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿ ಆದೇಶಿಸಿದೆ.
ಫೆಬ್ರುವರಿ 15 ರಂದು ಚುನಾವಣಾ ಬಾಂಡ್ ಗಳು ಅಸಾಂವಿಧಾನಿಕ ಎಂದು ಸುಪ್ರೀಂಕೋರ್ಟ್ ಘೋಷಿಸಿತ್ತು. ಹಾಗೆಯೇ ಬಾಂಡ್ ನ ವಿವರಗಳನ್ನು ಮಾರ್ಚ್ 6ರೊಳಗೆ ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು ಎಂದು ಸೂಚನೆ ನೀಡಿತ್ತು. ಇಷ್ಟು ಕಡಿಮೆ ಅವಧಿಯಲ್ಲಿ ಇದು ಸಾಧ್ಯವಿಲ್ಲ ಜೂನ್ 30ರವರೆಗೆ ಕಾಲಾವಕಾಶ ನೀಡುವಂತೆ ಎಸ್ ಬಿಐ ನ್ಯಾಯಾಲಯಕ್ಕೆ ಕೋರಿತ್ತು. ಆದ್ದರಿಂದ ನ್ಯಾಯಪೀಠವು ಇಂದು ಆದೇಶ ನೀಡಿದ್ದು ನಾಳೆಯೊಳಗೆ ಎಲ್ಲಾ ವಿವರ ಚುನಾವಣಾ ಆಯೋಗಕ್ಕೆ ನೀಡುವಂತೆ ಸೂಚಿಸಿದೆ.