ಬೆಂಗಳೂರು : ಪ್ರತಿಷ್ಠಿತ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶರಾಗಿದ್ದ ಡಾ. ಮಂಜುನಾಥ್ ಅವರು ನಾಳೆ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಅವರು ಲೋಕಸಭಾ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಡಿ ಕೆ ಸುರೇಶ್ ಅವರ ವಿರುದ್ಧ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸ್ಪರ್ಧೆಯ ಸಂಬಂಧ ಎಲ್ಲಾ ರೀತಿಯ ಸಿದ್ದತೆ ನಡೆಸಿರುವ ಡಾ. ಮಂಜುನಾಥ್ ಅವರು, ಮಾಜಿ ಪ್ರಧಾನಿ ದೇವೇಗೌಡರ ಅಳಿಯರಾಗಿದ್ದಾರೆ. ಇದುವರೆಗೂ ಅವರು ಜೆಡಿಎಸ್ ನಿಂದಲೇ ಸ್ಪರ್ಧಿಸುವ ಊಹಾಪೋಹಗಳಿತ್ತು, ಆದರೆ, ಇದೀಗ ಸಂಸದ ಡಿಕೆ ಸುರೇಶ್ ವಿರುದ್ಧ ಬಿಜೆಪಿಯಿಂದ ಕಣಕ್ಕಿಳಿಯಲು ನಿರ್ಧಾರಿಸಿದ್ದಾರೆ ಎಂದು ತಿಳಿದುಬಂದಿದೆ.

ಆದರೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಅವರ ಪುತ್ರ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮುನ್ನೆಡೆಸುತ್ತಿರುವ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸದೇ ಇರುವುದು ಮಾತ್ರ ಹಲವು ಅನುಮಾನಗಳಿಗೆ ಕಾರಣವಾಗಿದೆ.
ಬಿಜೆಪಿ ಹೈಕಮಾಂಡ್ ನಿಂದ ಸೂಚನೆ ಸಿಕ್ಕಿರುವ ಹಿನ್ನೆಲೆಯಲ್ಲಿ ಯಾವ ರೀತಿಯಲ್ಲಿ ಪ್ರಚಾರ ನಡೆಸಬೇಕು ಎನ್ನುವ ಕುರಿತು ಸಿದ್ದತೆಗೆ ಡಾ. ಮಂಜುನಾಥ್ ಮುಂದಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ಸಂಜೆ ರಾಜರಾಜೇಶ್ವರಿ ಕ್ಷೇತ್ರದ ಜೆಪಿ ಪಾರ್ಕ್ ನಲ್ಲಿ ಸಭೆ ನಡೆಯಲಿದೆ. ಈ ಸಭೆ ಶಾಸಕ ಮುನಿರತ್ನ ನೇತೃತ್ವದಲ್ಲಿ ನಡೆಯುತ್ತಿದ್ದು, ಸಭೆಗೆ ಡಾ. ಮಂಜುನಾಥ್ ಅವರಿಗೆ ಆಹ್ವಾನ ನೀಡಲಾಗಿದೆ ಎಂದು ತಿಳಿದುಬಂದಿದೆ.
ನಾಳೆ ಬೆಳಿಗ್ಗೆ ಬಿಜೆಪಿ ಪಕ್ಷದ ಕಚೇರಿಯಲ್ಲಿ ಡಾ. ಮಂಜುನಾಥ್ ಅವರು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.




