ನವದೆಹಲಿ: ಕೇಂದ್ರ ಚುನಾವಣಾ ಆಯುಕ್ತರಾಗಿದ್ದ ಅರುಣ್ ಗೋಯೆಲ್ ಅವರ ದಿಢೀರ್ ರಾಜೀನಾಮೆ ಮತ್ತು ಅವಧಿ ಮುಕ್ತಾಯಗೊಂಡು ಖಾಲಿಯಾಗಿದ್ದ ಅನೂಪ್ ಚಂದ್ರ ಪಾಂಡೆ ಅವರ ಸ್ಥಾನಕ್ಕೆ ನೂತನ ಚುನಾವಣಾ ಆಯುಕ್ತರನ್ನು ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಆಯ್ಕೆ ಸಮಿತಿ ಸದಸ್ಯರ ಒಮ್ಮತದ ಮೇರೆಗೆ ಈ ಇಬ್ಬರನ್ನು ಆಯ್ಕೆ ಮಾಡಲಾಗಿದೆ ಎಂದು ಆಯ್ಕೆ ಸಮಿತಿ ಸದಸ್ಯರೂ ಆಗಿರುವ ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ತಿಳಿಸಿದ್ದಾರೆ.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಚೌಧರಿ, ಸಮಿತಿ ಮುಂದೆ ಒಟ್ಟು ಆರು ಹೆಸರುಗಳು ಬಂದಿದ್ದವು ಅವರಲ್ಲಿ ಸುಖ್ಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿಸಿದರು.
ಹಾಗೆಯೇ ಕಾನೂನು ಸಚಿವರ ನೇತೃತ್ವದ ಈ ಸಮಿತಿಯ ಎದುರು 200 ಕ್ಕೂ ಹೆಚ್ಚು ಅಭ್ಯರ್ಥಿಗಳ ಪಟ್ಟಿಯಲ್ಲಿ ಕೇವಲ 6 ಜನರ ಹೆಸರನ್ನು ಅಂತಿಮ ಆಯ್ಕೆ ಸುತ್ತಿಗೆ ಹೇಗೆ ಬಂದವು ಎನ್ನುವುದಕ್ಕೆ ಸ್ಪಷ್ಟತೆಯಿಲ್ಲ ಎಂದು ತಿಳಿಸಿದರು.




