ಬೆಂಗಳೂರು : ಬಿ ಎಸ್ ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ, ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ, ಅವರು ಯಾರೋ ಮಹಿಳೆ ದೂರು ಕೊಟ್ಟಿದ್ದಾರೆ, ಕಾನೂನು ಪ್ರಕಾರ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರ ಬಗ್ಗೆ ಡಿಸಿಎಂ, ಸಿಎಂ ಜೊತೆಗೂ ಚರ್ಚೆ ಮಾಡಿದ್ದೇವೆ. ಮುಖ್ಯಮಂತ್ರಿಗಳು ಕೂಡ ಇದರ ಬಗ್ಗೆ ಮಾಹಿತಿ ಪಡೆದಿದ್ದಾರೆ. ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ, ಅದನ್ನು ಪರಿಶೀಲಿಸಿ ಕೇಸ್ ರಿಜಿಸ್ಟರ್ ಮಾಡಿದ್ದಾರೆ ಎಂದು ತಿಳಿಸಿದರು.
ಇದರಲ್ಲಿ ಯಾವುದೇ ರೀತಿಯಲ್ಲಿ ರಾಜಕೀಯ ಇಲ್ಲ, ಪೊಲೀಸರು ಅದರ ಬಗ್ಗೆ ತನಿಖೆ ಮಾಡುತ್ತಿದ್ದಾರೆ, ತನಿಖೆ ಆಗುವವರೆಗೂ ಯಾವುದೇ ವಿಷಯ ತಿಳಿಸೋಕೆ ಆಗಲ್ಲ. ಇದು ಒಬ್ಬ ಮಾಜಿ ಸಿಎಂ ವಿಷಯಕ್ಕೆ ಸಂಬಂಧಿಸಿದ್ದು, ಇದು ಬಹಳ ಸೂಕ್ಷ್ಮ ವಿಷಯ ಎಂದು ತಿಳಿಸಿದರು.
ಬಾಲಕಿ ಹಾಗೂ ಆಕೆಯ ಕುಟುಂಬಕ್ಕೆ ರಕ್ಷಣೆ ಅಗತ್ಯ ಬಿದ್ದರೆ ಕೊಡ್ತೀವಿ, ಮಾಜಿ ಸಿಎಂ ವಶಕ್ಕೆ ಸಂಬಂಧಿಸಿದಂತೆ ತನಿಖೆಯ ಮೇಲೆ ಪೋಲೀಸರು ನಿರ್ಧಾರ ಮಾಡುತ್ತಾರೆ ಎಂದು ಪರಮೇಶ್ವರ್ ತಿಳಿಸಿದರು.




