VALMIKI CORPORATION SCAM: ವಾಲ್ಮೀಕಿ ನಿಗಮ ಹಗರಣ: ಬಿ ನಾಗೇಂದ್ರ ರಾಜೀನಾಮೆಗೆ ಹೆಚ್ಚಿದ ಒತ್ತಡ, ಬಿಜೆಪಿಯಿಂದ ಕೆಲವೇ ಕ್ಷಣಗಳಲ್ಲಿ ರಾಜಭವನ ಚಲೋ

ಬೆಂಗಳೂರು: ವಾಲ್ಮೀಕಿ ನಿಗಮದಿಂದ 94.73 ಕೋಟಿ ಅಕ್ರಮವಾಗಿ ವಿವಿಧ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆಗೆ ಒತ್ತಾಯ ತೀವ್ರಗೊಂಡಿದೆ. ಸಚಿವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಜೂನ್ 6 ಗಡುವು ನೀಡಿತ್ತು. ಅದಂತೆ ಇದೀಗ ಗುಡವು ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಗುರುವಾರ ರಾಜಭವನ ಚಲೋ ಹಮ್ಮಿಕೊಂಡಿದೆ.

ಗುರುವಾರ ಬೆಳಗ್ಗೆ ವಿಧಾನಸೌಧದಿಂದ ರಾಜಭವನದ ವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ. ಬಳಿಕ ರಾಜ್ಯಪಾಲರನ್ನು ಭೇಟಿ ಮಾಡಿ ಬಿಜೆಪಿ ನಾಯಕರು ಮನವಿ ಸಲ್ಲಿಸಲಿದ್ದಾರೆ. ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಪ್ರಮುಖ ಬಿಜೆಪಿ ಮುಖಂಡರು ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

ರಾಜೀನಾಮೆ ನೀಡ್ತಾರಾ ನಾಗೇಂದ್ರ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಲ್ಲಿ ನಡೆದಿದೆ ಎನ್ನಲಾದ 94.73 ಕೋಟಿ ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ಸಚಿವ ಬಿ ನಾಗೇಂದ್ರ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಕೊಡುವ ಸಾಧ್ಯತೆ ಇದೆ.

ಸಚಿವ ನಾಗೇಂದ್ರ ಅವರ ಜೊತೆಗೆ ಸಿಎಂ ಸಿದ್ದರಾಮಯ್ಯ ಬುಧವಾರ ರಾತ್ರಿ ತಮ್ಮ ನಿವಾಸದಲ್ಲಿ ಚರ್ಚೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಿಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಏನಿದು ಹಗರಣ

ವಾಲ್ಮೀಕಿ ನಿಗಮದಿಂದ 94.73 ಕೋಟಿ ಮೊತ್ತವನ್ನು ಯೂನಿಯನ್ ಬ್ಯಾಂಕ್ ವಸಂತ ನಗರ ಶಾಖೆಗೆ ವರ್ಗಾಯಿಸಲಾಗಿತ್ತು. ಬಳಿಕ ಅಲ್ಲಿಂದ ಹೈದರಬಾದ್ ನ ಫಸ್ಟ್‌ ಫೈನಾನ್ಸ್ ಕೋ ಅಪರೇಟಿವ್ ಸೊಸೈಟಿಗೆ ಸೇರಿದ 18 ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗಿತ್ತು ಎಂಬ ಆರೋಪ ಇದೆ.

ಈ ಹಿನ್ನೆಲೆಯಲ್ಲಿ ಇಗಾಗಲೇ ಎಸ್ಐಟಿ ರಚನೆ ಮಾಡಲಾಗಿದೆ. ಎಸ್‌ಐಟಿ ತಂಡ ಸಚಿವ ಆಪ್ತನೊಬ್ಬನನ್ನು ಬಂಧಿಸಿದೆ. ಈ ಹಿನ್ನೆಲೆಯಲ್ಲಿ ಸಚಿವರ ಪಾತ್ರದ ಬಗ್ಗೆಯೂ ಅನುಮಾನಗಳು ವ್ಯಕ್ತವಾಗುತ್ತಿವೆ. ಈ ನಿಟ್ಟಿನಲ್ಲಿ ನಾಗೇಂದ್ರ ರಾಜೀನಾಮೆಗೆ ಒತ್ತಾಯಗಳು ತೀವ್ರಗೊಂಡಿವೆ.

More News