ಬೆಂಗಳೂರು: ಕೇಂದ್ರ ಸರಕಾರವು ವರ್ಷಕ್ಕೆ 2,50,000 ಕೋಟಿ ರೂ.ಗಳಷ್ಟು ಅಗಾಧ ಸೆಸ್ ಸಂಗ್ರಹಿಸುತ್ತಿದ್ದರೂ ಅದರ ಹಂಚಿಕೆಯಲ್ಲಿ ಕರ್ನಾಟಕದಂತಹ ಪುರೋಗಾಮಿ ರಾಜ್ಯಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಆಕ್ಷೇಪಿಸಿದ್ದಾರೆ.
ಈ ಬಗ್ಗೆ ಅವರು ಶನಿವಾರ ‘ಎಕ್ಸ್’ ವೇದಿಕೆಯಲ್ಲಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
In the Dis-Guise of Cess,
— M B Patil (@MBPatil) June 16, 2024
Center is collecting close to 2,50,000 Crore per Year, worth of so called cess, to basically deprive the states.
States are being deprived of its share of Taxes. Especially performing states like Karnataka.
Maybe the states should file a PIL before… pic.twitter.com/63gYiwAeQx
ಸೆಸ್/ತೆರಿಗೆ ಪಾವತಿಯಲ್ಲಿ ಕರ್ನಾಟಕ, ತಮಿಳುನಾಡು, ತೆಲಂಗಾಣದಂತಹ ರಾಜ್ಯಗಳು ಮುಂಚೂಣಿಯಲ್ಲಿವೆ. ಆದರೆ, ಇದಕ್ಕೆ ಪ್ರತಿಯಾಗಿ ಕೇಂದ್ರ ಸರಕಾರದಿಂದ ಈ ರಾಜ್ಯಗಳಿಗೆ ನ್ಯಾಯೋಚಿತ ಪಾಲು ಬರುತ್ತಿಲ್ಲ. ಬದಲಿಗೆ ಹೆಚ್ಚಿನ ಪಾಲೆಲ್ಲ ಉತ್ತರಪ್ರದೇಶ ಮತ್ತು ಬಿಹಾರದಂತಹ ರಾಜ್ಯಗಳಿಗೆ ಹೋಗುತ್ತಿದೆ. ಇದು ಖಂಡಿತವಾಗಿಯೂ ಪ್ರಶ್ನಾರ್ಹ ಎಂದು ಅವರು ಹೇಳಿದ್ದಾರೆ. ಇದನ್ನು ಅವರು ತಮಿಳುನಾಡು ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳಾದ ಎಂ ಕೆ ಸ್ಟಾಲಿನ್ ಮತ್ತು ರೇವಂತ್ ರೆಡ್ಡಿ ಮುಂತಾದವರಿಗೆ ಟ್ಯಾಗ್ ಮಾಡಿದ್ದಾರೆ.
ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಕರ್ನಾಟಕದಂತಹ ರಾಜ್ಯಗಳು ತಮಗೆ ಬರಬೇಕಾದ ತೆರಿಗೆ ಪಾಲಿಗಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಿ, ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಬೇಕಾದ ಪ್ರಮೇಯ ಬರುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.




