Big Gift To Azeempeer Khadri: ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆದ್ದ ಬೆನ್ನಲ್ಲೇ ಅಜ್ಜಂಪೀರ್‌ ಖಾದ್ರಿಗೆ ಗಿಫ್ಟ್..!

ಬೆಂಗಳೂರು : ಶಿಗ್ಗಾವಿ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಗೆದ್ದ ಬೆನ್ನಲ್ಲೇ ಬಂಡಾಯವಾಗಿ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಿದ್ದ ಅಜ್ಜಂಪೀರ್ ಖಾದ್ರಿಗೆ ಗಿಫ್ಟ್ ಸಿಕ್ಕಿದೆ.

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಗಮದ ಅಧ್ಯಕ್ಷರನ್ನಾಗಿ ಅಜ್ಜಂಪೀರ್ ಖಾದ್ರಿ ಅವರನ್ನು ನೇಮಕ ಮಾಡಿ ಆದೇಶ ಮಾಡಲಾಗಿದೆ. ಅಜ್ಜಂಪೀರ್ ಖಾದ್ರಿ ಶಿಗ್ಗಾವಿ ಕ್ಷೇತ್ರದ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಟಿಕೆಟ್ ನೀಡಲಿಲ್ಲ.

ಟಿಕೆಟ್‌ ಗಾಗಿ ಸಾಕಷ್ಟು ಪ್ರಯತ್ನ ನಡೆಸಿದ್ದ ಅಜ್ಜಂಪೀರ್ ಕೊನೆಯ ಗಳಿಗೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ಅಲ್ಲದೆ, ಅವರ ಬೆಂಬಲಿಗರು ಸಚಿವ ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಎಂಎಲ್‌ಸಿ ಸ್ಥಾನಕ್ಕೆ ಬೇಡಿಕೆ ಇಟ್ಟಿದ ಖಾದ್ರಿ

ಇನ್ನು ಟಿಕೆಟ್ ಬೇಡಿಕೆ ಇಟ್ಟರೂ ಮಣಿಯದ ರಾಜ್ಯ ನಾಯಕರು ಯಾಸೀರ್ ಖಾನ್ ಪಠಾಣ್‌ಗೆ ಟಿಕೆಟ್ ನೀಡಲಾಗಿತ್ತು. ಇದರಿಂದ ಪತ್ಯೇಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದ ಖಾದ್ರಿ ಅವರನ್ನು ಸಿಎಂ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಂಧಾನ ಸಭೆ ನಡೆಸಿ ಸಮಾಧಾನ ಪಡಿಸಿದಲಾಗಿತ್ತು.

ಇದೇ ಸಂದರ್ಭದಲ್ಲಿ ಅಜ್ಜಂಪೀರ್ ಖಾದ್ರಿ ಅವರು ಎಂಎಲ್‌ಸಿ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಅವರ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸುವ ಭರವಸೆಯನ್ನು ಕೊಟ್ಟ ಮುಖಂಡರು, ಚುನಾವಣೆಯಲ್ಲಿ ಪಠಾಣ್ ಪರವಾಗಿ ಕೆಲಸ ಮಾಡುವಂತೆ ಸೂಚಿಸಿದ್ದರು.

ಚುನಾವಣೆಯಲ್ಲಿ ಸಕ್ರಿಯವಾಗಿದ್ದ ಖಾದ್ರಿ

ರಾಜ್ಯ ನಾಯಕರ ಸೂಚನೆಯಂತೆ ಅಜ್ಜಂಪೀರ್ ಖಾದ್ರಿ ಚುಣಾವಣೆಯಲ್ಲಿ ಯಾಸೀರ್ ಖಾನ್ ಪಠಾಣ್ ಪರವಾಗಿ ಪ್ರಚಾರ ನಡೆಸಿದ್ದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಜೊತೆಗೂಡಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದರು. ಈ ಎಲ್ಲದರ ಫಲವಾಗಿ ಯಾಸೀರ್ ಖಾನ್ ಪಠಾಣ್ ಶಿಗ್ಗಾವಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಎಂಎಲ್‌ಸಿ ಬದಲಾಗಿ ನಿಗಮ!

ಎಂಎಲ್‌ಎ ಟಿಕೆಟ್ ಕೈತಪ್ಪಿದ್ದ ಕಾರಣದಿಂದಾಗಿ ಎಂಎಲ್‌ಸಿ ಸ್ಥಾನದ ಆಕಾಂಕ್ಷಿಯಾಗಿದ್ದ ಖಾದ್ರಿ ಸಚಿವ ಜಮೀರ್ ಅಹ್ಮದ್ ಖಾನ್, ಹಿರಿಯ ಕಾಂಗ್ರೆಸ್ ಮುಸ್ಲಿಂ ಮುಖಂಡ ನಸೀರ್ ಅಹ್ಮದ್ ಸೇರಿದಂತೆ ಹಲವರನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಇದೀಗ ಚುನಾವಣೆಯ ಗೆಲವಿನ ಬೆನ್ನಲ್ಲೇ ಬೆಂಗಳೂರಿನಲ್ಲಿ ಠೀಕಾಣಿ ಹೂಡಿ ನಾಯಕರ ಮನೆಯಲ್ಲಿ ಕಾಣಿಸಿಕೊಂಡಿದ್ದರು.

ಇದೀಗ ಖಾದ್ರಿಗೆ ಎಂಎಲ್‌ಸಿ ಸ್ಥಾನದ ಬದಲಾಗಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನವನ್ನು ನೀಡಲಾಗಿದೆ. ಈ ಮೂಲಕ ಶಿಗ್ಗಾವಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಆದ ಗೆಲುವಿನ ಹಿನ್ನೆಲೆಯಲ್ಲಿ ಗಿಫ್ಟ್ ಖಾದ್ರಿಗೆ ಸಿಕ್ಕಂತಾಗಿದೆ.

More News